ಬೆಂಗಳೂರು : ಶಿವಮೊಗ್ಗದ ಹೊಸನಗರ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಸ್ವಾಮೀಜಿಗಳ ವಿರುದ್ಧದ ಅತ್ಯಾಚಾರ ಪ್ರಕರಣದಲ್ಲಿ ಸಿಐಡಿ ಶನಿವಾರ ಚಾರ್ಜ್ಶೀಟ್ ಸಲ್ಲಿಕೆ ಮಾಡಿದೆ. ಗಾಯಕಿ ಪ್ರೇಮಲತಾ ದಿವಾಕರ್ ಅವರ ಮೇಲೆ ಶ್ರೀಗಳು ಅತ್ಯಾಚಾರ ಮಾಡಿದ್ದಾರೆ ಎಂಬ ಆರೋಪದ ಕುರಿತು ಸಿಐಡಿ 680 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದೆ
ಸ್ವಾಮೀಜಿಗಳ ವಿರುದ್ಧದ ಅತ್ಯಾಚಾರ ಆರೋಪದ ತನಿಖೆಯನ್ನು ಸಿಐಡಿ ನಡೆಸುತ್ತಿದೆ. ಶನಿವಾರ ಬೆಂಗಳೂರಿನ 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಸಿಐಡಿ ಡಿವೈಎಸ್ಪಿ ಅಶೋಕ್ ಕುಮಾರ್ ಅವರು ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಗಳು ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆದಿದ್ದಾರೆ. 4 ಸಂಪುಟಗಳ ಚಾರ್ಜ್ಶೀಟ್ನಲ್ಲಿ 151 ಸಾಕ್ಷಿಗಳ ಹೇಳಿಕೆಯನ್ನು ಉಲ್ಲೇಖಿಸಲಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ 9 ಜಿಲ್ಲೆಯಲ್ಲಿ ಪ್ರೇಮಲತಾ ದಿವಾಕರ್ ಅವರ ಮೇಲೆ ಅತ್ಯಾಚಾರ ನಡೆದಿದೆ ಎಂದು ಸಿಐಡಿ ಚಾರ್ಜ್ಶೀಟ್ನಲ್ಲಿ ಹೇಳಿದೆ. 2014ರ ಜೂನ್ನಲ್ಲಿ ಬೆಂಗಳೂರಿನ ಗಿರಿನಗರದಲ್ಲಿರುವ ಮಠದಲ್ಲಿಯೂ ಅತ್ಯಾಚಾರ ನಡೆಸಲಾಗಿದೆ ಎಂದು ಉಲ್ಲೇಖಿಸಲಾಗಿದೆ.
ಐಪಿಸಿ ಸೆಕ್ಷನ್ 376(2), 508ರ ಅಡಿ 680 ಪುಟಗಳ ಚಾರ್ಜ್ಶೀಟ್ ಸಲ್ಲಿಕೆ ಮಾಡಲಾಗಿದೆ. 151 ಸಾಕ್ಷಿಗಳ ಹೇಳಿಕೆ, ಸಾಕ್ಷಾಧಾರಗಳು ಸೇರಿ ಒಟ್ಟು 1,341 ಪುಟಗಳಿವೆ. ರಾಮಕಥಾ ಕಾರ್ಯಕ್ರಮಕ್ಕೆ ಹೋಗಿದ್ದಾಗ ಮುಂಬೈ, ಕೋಲ್ಕತ್ತಾ, ಜೋಧ್ಪುರದಲ್ಲಿಯೂ ಅತ್ಯಾಚಾರ ನಡೆಸಲಾಗಿದೆ ಎಂದು ಚಾರ್ಜ್ಶೀಟ್ನಲ್ಲಿ ಹೇಳಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವೀರ್ಯ ಪರೀಕ್ಷೆಗೆ ಹಾಜರಾಗುವಂತೆ ಸಿಐಡಿ ಸ್ವಾಮೀಜಿಗಳಿಗೆ ನೋಟಿಸ್ ಜಾರಿಗೊಳಿಸಿದೆ. ಸಿಐಡಿ ನೋಟಿಸ್ ಅನ್ವಯ ಶ್ರೀಗಳು ಸೆ.30ರಂದು ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಹಾಜರಾಗಬೇಕಾಗಿದೆ. ಆದರೆ, ಶ್ರೀಗಳು ಈ ನೋಟಿಸ್ಗೆ ತಡೆಯಾಜ್ಞೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಇಂದು ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಸೆ.29ಕ್ಕೆ ವಿಚಾರಣೆ ಮುಂದೂಡಿದೆ.
Advertisement