ನವದಂಪತಿ ಆತ್ಮಹತ್ಯೆ

ಅವರಿಬ್ಬರು ಪ್ರೀತಿಸಿ ಮದುವೆಯಾಗಿದ್ದರು. ಅದ್ಯಾಕೋ ಗೊತ್ತಿಲ್ಲ ಇದ್ದಕ್ಕಿದ್ದಂತೆ ಇಬ್ಬರು ವಿಷ ಸೇವಿಸಿಇಹಲೋಕ ತ್ಯಜಿಸಿದ್ದಾರೆ...
(ಸಾಂದರ್ಭಿಕ  ಚಿತ್ರ)
(ಸಾಂದರ್ಭಿಕ ಚಿತ್ರ)

ಬೆಂಗಳೂರು: ಅವರಿಬ್ಬರು ಪ್ರೀತಿಸಿ ಮದುವೆಯಾಗಿದ್ದರು. ಅದ್ಯಾಕೋ ಗೊತ್ತಿಲ್ಲ ಇದ್ದಕ್ಕಿದ್ದಂತೆ ಇಬ್ಬರು ವಿಷ ಸೇವಿಸಿ ಇಹಲೋಕ ತ್ಯಜಿಸಿದ್ದಾರೆ.

ಅಸ್ಸಾಂ ಮೂಲದ ಮುಕ್ತಿಯಾರ್ (24) ಹಾಗೂ ಸಂಪಚಂದಾ (23) ದಂಪತಿ ಮೃತಪಟ್ಟವರು. ಈ ಘಟನೆ ಸರ್ಜಾಪುರ ರಸ್ತೆಯ ದೊಡ್ಡಕನ್ನಲ್ಲಿಯಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಮದುವೆಯಾಗಿ ಕೆಲಸ ಮಾಡಲು ಬೆಂಗಳೂರಿನಗೆ ನವದಂಪತಿ ಬಂದಿದ್ದರು.

ತಾವು ವಾಸವಿದ್ದ ಶೆಡ್ ನಲ್ಲೇ ವಿಷ ಸೇವಿಸಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂರು ತಿಂಗಳ ಹಿಂದೆ ಅಸ್ಸಾಂನಲ್ಲಿ ಇಬ್ಬರು ಪ್ರೇಮ ವಿವಾಹವಾಗಿದ್ದರು. ಕೆಲಸ ಹುಡುಕಿಕೊಂಡು ಕಳೆದ ನಾಲ್ಕೈದು ದಿನಗಳ ಹಿಂದೆ ನಗರಕ್ಕೆ ಬಂದಿದ್ದವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವುದು ಅಚ್ಚರಿ ಮೂಡಿಸಿದೆ. ಈ ಸಂಬಂಧ ಮೃತರ ಕುಟುಂಬ ಸದಸ್ಯರೊಂದಿಗೆ ಮಾತನಾಡುವುದಾಗಿ ಪೊಲೀಸರು ತಿಳಿಸಿದ್ದಾರೆ.

ಮುಕ್ತಿಯಾರ್ ಈ ಹಿಂದೆ ಬೆಂಗಳೂರಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದ. ಹೀಗಾಗಿ ಮದುವೆಯ ನಂತರ ಮತ್ತೆ ನಗರಕ್ಕೆ ಆಗಮಿಸಿದ್ದ. ಇಬ್ಬರು ತಮ್ಮ ಶೆಡ್ ಸಮೀಪದ ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ಕೆಲಸಕ್ಕೂ ಸೇರಿದ್ದರು. ಶುಕ್ರವಾರ ಕೆಲಸ ಮುಗಿಸಿಕೊಂಡು ರಾತ್ರಿ ಮನೆಗೆ ಬಂದಾಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಗ್ಗೆ ಹೊತ್ತು ಕಳೆದರೂ ಮನೆಯ ಬಾಗಿಲು ತೆರೆಯದ ಕಾರಣ ಅನುಮಾನಗೊಂಡು ಸ್ಥಳೀಯರೇ ಬಾಗಿಲು ತೆರೆದಾಗ ಘಟನೆ ಬೆಳಕಿಗೆ ಬಂದಿದೆ. ನಂತರ ಅವರು ಕೂಡಲೇ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲಿಸಿದ್ದು, ದಂಪತಿ ವಾಸವಿದ್ದ ಶೆಡ್ ನಲ್ಲಿ ಕೀಟನಾಶಕ ಬಾಟಲಿ ಸಿಕ್ಕಿದ್ದು, ಇದನ್ನು ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com