ಬೆಂಗಳೂರು: ರಾಜ್ಯದ ಜನರ ಆರೋಗ್ಯ ಸೇವೆಗಾಗಿ ಇರುವ 108 ಆಂಬ್ಯುಲೆನ್ಸ್ ಗಳ ನಿರ್ವಹಣೆಯಲ್ಲಿ ಲೋಪವೆಸಗಿದ್ದಲ್ಲಿ ಜಿವಿಕೆ ಸಂಸ್ಥೆ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರ ಬದ್ಧ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.
ನಗರದ ಅರಮನೆ ಮೈದಾನದಲ್ಲಿ ಸಭಾಂಗಣ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರತಿಭಟನಾ ನಿರತ ಆಂಬ್ಯುಲೆನ್ಸ್ ನೌಕರರ ಬೇಡಿಕೆಗಳಿಗೂ ಸರ್ಕಾರಕ್ಕೂ ಸಂಬಂಧವಿಲ್ಲ. ಈ ಸಂಬಂಧ ಈಗಾಗಲೇ ಸಮಸ್ಯೆ ಬಗೆಹರಿಸುವಂತೆ ಜಿವಿಕೆ ಸಂಸ್ಥೆಗೆ ಸೂಚನೆ ನೀಡಲಾಗಿದೆ.
ಎಸ್ಮಾ ಜಾರಿ ಹಿನ್ನೆಲೆಯಲ್ಲಿ ವಾರದೊಳಗೆ ಹೊಸ ನೌಕರರ ನೇಮಕ ಮಾಡಿಕೊಳ್ಳಲು ಜಿವಿಕೆಗೆ ನಿರ್ದೇಶನ ನೀಡಲಾಗಿದೆ ಈ ವಿಚಾರದಲ್ಲಿ ಯಾರ ಒತ್ತಡಕ್ಕೂ ಮಣಿಯುವುದಿಲ್ಲ. ಹಾಗೇ ಹಳೆಯ ಆಂಬ್ಯುಲೆನ್ಸ್ ಗಳ ಬದಲಾವಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ರಾಜ್ಯದಲ್ಲಿ ಈಗಾಗಲೇ 113 ತಾಲೂಕು ಆಸ್ಪತ್ರೆಗಳಲ್ಲಿ ಆಯುಷ್ ಚಿಕಿತ್ಸೆ ನೀಡುತ್ತಿದ್ದು, ಮುಂದಿನ ದಿನಗಳಲ್ಲಿ ಉಳಿದ ತಾಲೂಕುಗಳಿಗೂ ಈ ಸೇವೆ ವಿಸ್ತರಿಸಲಾಗುವುದು. ದಕ್ಷಿಣ ಕನ್ನಡ ಹಾಗೂ ಗದನ ಜಲ್ಲೆಗಳಲ್ಲಿ 50 ಆಸಿಗೆಗಳ ಆಯುರ್ವೇದ ಆಸ್ಪತ್ರೆ ಸ್ಥಾಪನೆ ಜತೆಗೆ ಎಲ್ಲ ರೀತಿಯ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು.
Advertisement