ಚುನಾವಣೆಯಲ್ಲಿ 4 ಸಾವಿರ ಕೋಟಿಗೂ ಅಧಿಕ ಕಪ್ಪು ಹಣ ಚಲಾವಣೆ: ಸಿಂಧ್ಯಾ

ಬೆಂಗಳೂರು: ಮತದಾರರು ಈ ಬಾರಿಯ ಚುನಾವಣೆಯಲ್ಲಿ ಯಾವುದೇ ಆಮಿಷಕ್ಕೆ ಬಲಿಯಾಗದೆ ರಾಜಕೀಯ ಪಕ್ಷಗಳಿಗೆ ಸೂಕ್ತ ಉತ್ತರ ನೀಡಬೇಕು ಎಂದು ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯಾ ಅವರು ಹೇಳಿದ್ದಾರೆ.
ಕನ್ನಡ ಜನಶಕ್ತಿ ಕೇಂದ್ರ ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ 'ಶಾಂತವೇರಿ ಗೋಪಾಲಗೌಡ ಪ್ರಶಸ್ತಿ' ಪ್ರದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಚುನಾವಣಾ ಆಯೋಗ ಕಟ್ಟುನಿಟ್ಟಿನ ಕ್ರಮಕೈಗೊಂಡರೂ ಚುನಾವಣೆ ವೇಳೆ ವಿವಿಧ ರಾಜಕೀಯ ಪಕ್ಷಗಳು ವಾಮಮಾರ್ಗದ ಮೂಲಕ ಪ್ರಚಾರ ನಡೆಸುವ ಜತೆಗೆ ತಮ್ಮ ಪಕ್ಷಕ್ಕೇ ಮತ ಚಲಾಯಿಸುವಂತೆ ಪ್ರಚೋದಿಸುತ್ತಿವೆ. ಅದಕ್ಕಾಗಿ ಹಣದ ಹೊಳೆ ಹರಿಸಲಾಗುತ್ತಿದ್ದು, ಈ ಬಾರಿಯ ಚುನಾವಣಾ ಸಮಯದಲ್ಲಿ ಒಟ್ಟು ನಾಲ್ಕು ಸಾವಿರ ಕೋಟಿಗೂ ಅಧಿಕ ಮೊತ್ತದ ಕಪ್ಪು ಹಣ ಚಲಾವಣೆಯಾಗುವ ಸಾಧ್ಯತೆ ಇದೆ.
ಇಂತಹ ಸಂದರ್ಭದಲ್ಲಿ ಮತದಾರರು ಯಾವುದೇ ಆಮಿಷಕ್ಕೆ ಬಲಿಯಾಗದೆ ಮೌಲ್ಯಯುತ ಮತದಾನ ಮಾಡುವ ಮೂಲಕ ರಾಜಕೀಯ ಪಕ್ಷಗಳಿಗೆ ಸೂಕ್ತ ಉತ್ತರ ನೀಡಬೇಕು ಎಂದು ಅವರು ಅಭಿಪ್ರಾಯಪಟ್ಟರು.
ಮಾಜಿ ಸಚಿವ ಎಂ.ವಿ.ರಾಜಶೇಖರನ್ ಅವರು ಮಾತನಾಡಿ, ಭ್ರಷ್ಟಾಚಾರ ವಿಚಾರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಮುಂಚೂಣಿಯಲ್ಲಿವೆ ಎಂದು ಬೇಸರ ವ್ಯಕ್ತಪಡಿಸಿದ ಅವರು, ನೈತಿಕತೆ ಕುಸಿಯುತ್ತಿರುವ ಈ ಸಂದರ್ಭದಲ್ಲಿ ಗೋಪಾಲಗೌಡರಂತಹ ನಾಯಕರ ಅಗತ್ಯವಿದೆ ಎಂದರು.
ಹಿರಿಯ ರಾಜಕಾರಣಿ, ಸಮಾಜವಾದಿ ಬಿ.ಸ್ವಾಮಿರಾವ್ ಅವರಿಗೆ ಇದೇ ವೇಳೆ ಶಾಂತವೇರಿ ಗೋಪಾಲಗೌಡ ಪ್ರಶಸ್ತಿ ಪ್ರದಾನ ಮಾಡಲಾಯಿತು.
ವಿಧಾನಪರಿಷತ್ ಸದಸ್ಯರಾದ ಡಾ.ಎಂ.ಆರ್.ದೊರೆಸ್ವಾಮಿ, ಅಶ್ವತ್ಥನಾರಾಯಣ, ಕನ್ನಡ ಜನಶಕ್ತಿ ಕೇಂದ್ರದ ಅಧ್ಯಕ್ಷ ಸಿ.ಕೆ.ರಾಮೇಗೌಡ ಅವರು ಹಾಜರಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com