ಸರ್ಕಾರಿ ನೌಕರರ ರಾಜ್ಯ ಮಟ್ಟದ ಸಮ್ಮೇಳನ 22ರಂದು ಮೈಸೂರಲ್ಲಿ

Updated on

ಕನ್ನಡಪ್ರಭ ವಾರ್ತೆ, ಹಾವೇರಿ, ಜು. 31
ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಆ. 22ರಂದು ಮೈಸೂರಿನಲ್ಲಿ ರಾಜ್ಯ ಮಟ್ಟದ ಸಮ್ಮೇಳನ ಹಾಗೂ ವಿಚಾರ ಸಂಕಿರಣ ಏರ್ಪಡಿಸಲಾಗಿದೆ ಎಂದು ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಎಂ. ಪಟೇಲ್ ಪಾಂಡು ಹೇಳಿದರು.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ರಾಜ್ಯಾದ್ಯಂತದಿಂದ ಸುಮಾರು ಲಕ್ಷಕ್ಕೂ ಹೆಚ್ಚು ನೌಕರರರು ಈ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮೇಳನಕ್ಕೆ ಚಾಲನೆ ನೀಡಲಿದ್ದು, ಸರ್ರ್ಕಾರದ ವಿವಿಧ ಇಲಾಖೆ ಮಂತ್ರಿಗಳು ಸಮ್ಮೇಳದಲ್ಲಿ ಭಾಗವಹಿಸುವರು ಎಂದರು.
ಸಮ್ಮೇಳನದಲ್ಲಿ ಪಾಲ್ಗೊಳ್ಳುವ ಪ್ರತಿನಿಧಿಗಳಿಗೆ ಸರ್ಕಾರ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಲಿದ್ದು, ನೌಕರರು ಇದರ ಸದುಪಯೋಗ ಪಡೆದುಕೊಂಡು ಸಮ್ಮೇಳನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು. ಸಂಘವನ್ನು ಪ್ರತಿನಿಧಿಸುವ ಪದಾಧಿಕಾರಿಗಳು ಅಥವಾ ರಾಜ್ಯ ಪರಿಷತ್ ಸದಸ್ಯರಲ್ಲಿ ಪ್ರತಿನಿಧಿ ಶುಲ್ಕ ಪಾವತಿಸಿ ಕೂಪನ್‌ಗಳನ್ನು ಪಡೆಯಬೇಕು ಎಂದು ಕೋರಿದರು.
ಸಮ್ಮೇಳನದ ಸವಿನೆನಪಿಗಾಗಿ ಸ್ಮರಣ ಸಂಚಿಕೆ ಹೊರತರಲಾಗುತ್ತಿದೆ ಎಂದರು. ಪ್ರಸ್ತುತ ಕೇಂದ್ರ ಸರ್ಕಾರ ತನ್ನ ನೌಕರರ ವೇತನ ಭತ್ಯೆಗಳ ಪರಿಷ್ಕರಣೆಗಾಗಿ 7ನೇ ವೇತನ ಸಮಿತಿ ರಚಿಸಿದ್ದು, ಅದು ಅನುಷ್ಠಾನಗೊಂಡರೆ ರಾಜ್ಯ ಹಾಗೂ ಕೇಂದ್ರ ಸರ್ಕಾರಿ ನೌಕರರ ವೇತನದಲ್ಲಿ ಶೇ. 25ರಿಂದ 30ರಷ್ಟು ವ್ಯತ್ಯಾಸ ಕಂಡು ಬರುತ್ತದೆ. ಇದರಿಂದ ರಾಜ್ಯ ಸರ್ಕಾರಿ ನೌಕರರು ಆರ್ಥಿಕ ಸಂಕಷ್ಟಕ್ಕೊಳಗಾಗಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಈ ಬಗ್ಗೆ ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಲಾಗಿದೆ. ಜತೆಗೆ ನೌಕರರ ವೇತನ, ಭತ್ಯೆಗಾಗಿ ಸರ್ಕಾರ ಶೇ. 23ರಷ್ಟು ಮಾತ್ರ ಖರ್ಚು ಮಾಡುತ್ತಿದೆ ಎಂಬುದನ್ನು ಅಂಕಿ-ಅಂಶಗಳ ಸಹಿತ ತಿಳಿಸಲಾಗಿದೆ. ತನ್ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರ ವೇತನ ವ್ಯತ್ಯಾಸ ಕಡಿಮೆ ಮಾಡಲು ಕೇಳಿಕೊಳ್ಳಲಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಸಂಘದ ರಾಜ್ಯ ಘಟಕದ ಖಜಾಂಚಿ ಯೋಗಾನಂದ, ಉಪಾಧ್ಯಕ್ಷ ಜಯರಾಮಯ್ಯ, ಸಂಘಟನಾ ಕಾರ್ಯದರ್ಶಿ ಗಿರಿಗೌಡ, ಜಿಲ್ಲಾ ಘಟಕದ ಎಸ್.ಬಿ. ಕಿನ್ನಾಳ, ಚಂದ್ರಶೇಖರ್ ಮಾಳಗಿ, ಶಂಕರ ಸುತಾರ, ಸಿ.ವಿ. ಹಿರೇಮಠ ಇತರರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com