ಕ.ಪ್ರ.ವಾರ್ತೆ , ಮೈಸೂರು , ಆ. 20
ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಸಾಂಸ್ಕೃತಿಕ ಚಟುವಟಿಕೆಗಳು ಬಹಳ ಮುಖ್ಯ ಪಾತ್ರ ವಹಿಸುತ್ತವೆ ಎಂದು ಜಾನಪದ ಕಲಾವಿದ ಸೋಸಲೆ ಶಶಿಕಾಂತ್ ಹೇಳಿದರು.
ಸಿದ್ದಾರ್ಥನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ಏರ್ಪಡಿಸಿದ್ದ 2013- 14ನೇ ಶೈಕ್ಷಣಿಕ ಸಾಲಿನ ಪ್ರತಿಭಾನ್ವೇಷಣೆ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಜಾಗತಿಕ ಮಟ್ಟದ ಸಾಂಸ್ಕೃತಿಕ ಚಟುವಟಿಕೆಗಳ ಬಗ್ಗೆ ಅರಿವು ಮೂಡಿಸಿಕೊಳ್ಳಬೇಕು ಎಂದರು. ದೇಶ, ವಿದೇಶ ಸಾಂಸ್ಕೃತಿಕ ವೈವಿಧ್ಯತೆಗಳು ಒಂದು ಸಂಸ್ಕೃತಿಯ ಬೆಳವಣಿಗೆಗೆ ದಾರಿಯಾಗುತ್ತದೆ. ವಿದ್ಯಾರ್ಥಿಗಳು ಸಾಂಸ್ಕೃತಿಕ ಹಬ್ಬಗಳಲ್ಲಿ ಭಾಗವಹಿಸುವ ಮೂಲಕ ಸಾಮಾಜಿಕ ಸ್ವಾಸ್ಥ್ಯ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ತೊಡಗಿಸಿಕೊಳ್ಳಬೇಕು. ಸಂಸ್ಕೃತಿಯ ವಾಹಕರಾಗಿ ಕಾರ್ಯಪ್ರವೃತ್ತರಾಗುವಂತೆ ಸಲಹೆ ನೀಡಿದ ಅವರು, ಪ್ರಸ್ತುತ ಪೀಳಿಗೆಗೆ ಜಾನಪದ ಮತ್ತು ಸಾಂಸ್ಕೃತಿಕ ಸಂವೇದನೆಯ ಅಗತ್ಯ ಕುರಿತು ತಿಳಿಸಿದರು. ಪ್ರಾಂಶುಪಾಲೆ ಪ್ರೊ. ಆರ್. ವಿಜಯಲಕ್ಷ್ಮೀ ಅಧ್ಯಕ್ಷತೆ ವಹಿಸಿದ್ದರು. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯಸ್ಥೆ ಎನ್. ಗಾಯತ್ರಿ, ಕಾಲೇಜಿನ ಅಧೀಕ್ಷಕ ವೆಂಕಟೇಶ್, ಅರಣ್ ಇದ್ದರು. ಡಾ.ಪಿ. ಚಂದ್ರಶೇಖರ್ ಪ್ರಾಸ್ತಾವಿಕ ಭಾಷಣ ಮಾಡಿದರು. ಪ್ರೊ. ಡಿ. ಪುರುಷೋತ್ತಮ ನಿರೂಪಿಸಿದರು. ಕೆ.ಎಂ. ಪ್ರಸನ್ನಕುಮಾರ್ ವಂದಿಸಿದರು.
Advertisement