ಪಾಟ್ನಾ: ಬಿಹಾರದ ಮಹಾಮೈತ್ರಿಕೂಟದಲ್ಲಿ ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಆರ್ಜೆಡಿ ನಡುವೆ ಬಿರುಕು ಉಂಟಾಗಿದ್ದು, ಸ್ಥಾನ ಹಂಚಿಕೆ ಒಪ್ಪಂದದಲ್ಲಿ ನಮಗೆ ಅನ್ಯಾಯವಾಗಿದೆ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ.
ಇತ್ತೀಚಿಗಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಕೀರ್ತಿ ಆಜಾದ್ ಅವರು ಬಿಹಾರದಲ್ಲಿ ಸೀಟ್ ಹಂಚಿಕೆಗೆ ಸಂಬಂಧಿಸಿದಂತೆ ಹೈಕಮಾಂಡ್ ಮಧ್ಯ ಪ್ರವೇಶಿಸಿ, ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಕೀರ್ತಿ ಆಜಾದ್ ಅವರು ದರ್ಭಾಂಗಾ ಕ್ಷೇತ್ರದ ಹಾಲಿ ಸಂಸದರಾಗಿದ್ದು, ಆ ಕ್ಷೇತ್ರವನ್ನು ತಮಗೆ ನೀಡಬೇಕೆಂದು ಕಾಂಗ್ರೆಸ್ ಪಟ್ಟು ಹಿಡಿದಿದೆ. ಆದರೆ, ಅರ್ಜೆಡಿ ಅಲ್ಲಿ ಪಕ್ಷದ ಹಿರಿಯ ನಾಯಕ ಅಬ್ದುಲ್ ಬಾರಿ ಸಿದ್ದಿಕಿ ಅವರನ್ನು ಕಣಕ್ಕಿಳಿಸಲು ನಿರ್ಧರಿಸಿದೆ. ಆರ್ಜೆಡಿಯ ನಡೆ ಕಾಂಗ್ರೆಸ್ ಕಾರ್ಯಕರ್ತರನ್ನು ಕೆರಳಿಸಿದೆ.
ನಾವು ಹಾಲಿ ಕ್ಷೇತ್ರವನ್ನು ಉಳಿಸಿಕೊಳ್ಳಲು ಸಾಧ್ಯವಾಗದಿದ್ದರೆ, ಅದು ಅಭ್ಯರ್ಥಿಗೆ ಮಾತ್ರವಲ್ಲ ಇಡೀ ಪಕ್ಷಕ್ಕೆ ಹೊಡೆತ ಬೀಳಲಿದೆ. ದರ್ಭಂಗಾ ಹಾಲಿ ಸಂಸದರ ಕ್ಷೇತ್ರದ ಬಗ್ಗೆ ಕಾಂಗ್ರೆಸ್ ನ ಪ್ರಮುಖ ನಾಯಕರು ನಿರ್ಧಾರ ಕೈಗೊಳ್ಳಬೇಕು ಎಂದಿದ್ದಾರೆ.
40 ಸೀಟುಗಳಿರುವ ಬಿಹಾರದಲ್ಲಿ ಆರ್ಜೆಡಿ 20 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ. ಕಾಂಗ್ರೆಸ್ 9, ಎಚ್ಎಎಂ 3, ಆರ್ಎಲ್ಎಸ್ಪಿ 5, ವಿಐಪಿ 3 ಮತ್ತು ಸಿಪಿಐ 1 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ಒಪ್ಪಂದ ಮಾಡಿಕೊಳ್ಳಲಾಗಿದೆ.