ಪಾಟ್ನಾ: ಬಿಹಾರದ ಪ್ರತಿಪಕ್ಷ ರಾಷ್ಟ್ರೀಯ ಜನತಾ ದಳ(ಆರ್ ಜೆಡಿ) ಸೋಮವಾರ ಲೋಕಸಭೆ ಚುನಾವಣೆಗೆ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಖಾಸಗಿ ಕ್ಷೇತ್ರದಲ್ಲಿ ದಲಿತರಿಗೆ, ಒಬಿಸಿ, ಇಬಿಸಿ ಮತ್ತು ಬುಡಕಟ್ಟು ಜನರಿಗೆ ಮೀಸಲಾತಿ ಹಾಗೂ 2021ಕ್ಕೆ ಜಾತಿ ಸಮೀಕ್ಷೆ ನಡೆಸುವ ಭರವಸೆ ನೀಡಿದೆ.
ಇಂದು ಪಕ್ಷದ ಮುಖ್ಯ ಕಚೇರಿಯಲ್ಲಿ ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಅವರು ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿದರು.
ಈ ವೇಳೆ ಮಾತನಾಡಿದ ಬಿಹಾರ ಮಾಜಿ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು, ನಾವು ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿದ್ದೇವೆ ಮತ್ತು ಮಂಡಯ ಆಯೋಗದ ವರದಿಯನ್ನು ಜಾರಿಗೆ ತರಲಾಗುವುದು ಎಂದರು.
ಮಹಾಮೈತ್ರಿಯ ಪ್ರಕಾರ ಬಿಹಾರದಲ್ಲಿ 40 ಕ್ಷೇತ್ರಗಳ ಪೈಕಿ ಆರ್ ಜೆಡಿ 19 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ. ಒಂಬತ್ತು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ಪರ್ಧಿಸಿದರೆ, ಉಳಿದ ಕ್ಷೇತ್ರಗಳಲ್ಲಿ ಸಣ್ಣ ಪಕ್ಷಗಳೂ ಸ್ಪರ್ಧಿಸುತ್ತಿವೆ.