ಉತ್ತರ ಪ್ರದೇಶದಲ್ಲಿ ಎಸ್ಪಿ, ಬಿಎಸ್ಪಿ ಮತ್ತು ಆರ್ಎಲ್ಡಿ ಪಕ್ಷಗಳು ಮೈತ್ರಿ ಮಾಡಿಕೊಂಡಿದ್ದು, ಸಮಾಜವಾದಿ ಪಕ್ಷಕ್ಕೆ ಲಖನೌ ಕ್ಷೇತ್ರ ಸಿಕ್ಕಿದೆ. ಬಿಜೆಪಿ ಭದ್ರಕೋಟೆಯಾಗಿರುವ ಈ ಕ್ಷೇತ್ರದಿಂದ ರಾಜನಾಥ ಸಿಂಗ್ ಸ್ಪರ್ಧೆ ಮಾಡುತ್ತಿರುವ ಕಾರಣಕ್ಕೆ ಇವರಿಗೆ ಪ್ರಬಲ ಸ್ಪರ್ಧೆ ಒಡ್ಡಲು ಮೈತ್ರಿಯಿಂದ ಸಮರ್ಥ ಅಭ್ಯರ್ಥಿಗಾಗಿ ಹುಡುಕಾಟ ನಡೆಸಲಾಗಿತ್ತು. ಇದಕ್ಕೂ ಮುನ್ನ ಶತ್ರುಘ್ನ ಸಿನ್ಹಾ ಅವರು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರನ್ನು ಭೇಟಿಯಾಗಿ ತಮ್ಮ ಪತ್ನಿಯನ್ನು ಅಭ್ಯರ್ಥಿಯನ್ನಾಗಿಸುವ ಬಗ್ಗೆ ಚರ್ಚೆ ನಡೆಸಿದ್ದರು. ಪಾಟ್ನಾ ಸಾಹಿಬ್ ಕ್ಷೇತ್ರದಿಂದ ಕಳೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿ, ಗೆದ್ದು ಸಂಸದನಾಗಿರುವ ಶತ್ರುಘ್ನ ಸಿನ್ಹಾ ಇತ್ತೀಚೆಗೆ ಬಿಜೆಪಿ ತೊರೆದು, ಈಗ ಅದೇ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದಾರೆ.