ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಮತ್ತೆ ಕಣಕ್ಕಿಳಿಯುತ್ತಿದ್ದು, ಏಪ್ರಿಲ್ 26ರಂದು ನಾಮಪತ್ರ ಸಲ್ಲಿಸಲಿದ್ದಾರೆ.
ಪ್ರಧಾನಿ ಮೋದಿ ಅವರು ನಾಮಪತ್ರ ಸಲ್ಲಿಕೆಗೂ ಮುನ್ನಾ ದಿನ ವಾರಣಾಸಿಯಲ್ಲಿ ಭರ್ಜರಿ ರೋಡ್ ಶೋ ನಡೆಸಲಿದ್ದು, ಬಿಜೆಪಿಯ ಹಿರಿಯ ನಾಯಕರು ಭಾಗಿಯಾಗಲಿದ್ದಾರೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.
2014ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಾರಣಾಸಿ ಕ್ಷೇತ್ರದಲ್ಲಿ ತಮ್ಮ ಪ್ರತಿಸ್ಪರ್ಧಿ ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರಾಯ್ ಅವರನ್ನು ಪರಾಭವಗೊಳಿಸಿದ್ದರು.
ಈ ಬಾರಿಯೂ ಕೂಡಾ ವಾರಣಾಸಿಯಿಂದ ಅಖಾಡಕ್ಕಿಳಿಯಲಿರುವ ಮೋದಿ ಏಪ್ರಿಲ್ 25ರಂದು ಭರ್ಜರಿ ರೋಡ್ ಶೋ ನಡೆಸಲು ಉದ್ದೇಶಿಸಿರುವುದಾಗಿ ಮಾಧ್ಯಮದ ವರದಿ ವಿವರಿಸಿದೆ.
ವಾರಣಾಸಿಯ ಬನರಾಸ್ ಹಿಂದೂ ವಿಶ್ವವಿದ್ಯಾಲಯದ ಲಂಕಾ ಗೇಟ್ ಸಮೀಪದಿಂದ ಪ್ರಧಾನಿ ಮೋದಿ ರೋಡ್ ಶೋ ಆರಂಭವಾಗಲಿದೆ. ಮೋದಿ ಅವರು ಪಂಡಿತ್ ಮದನ್ ಮೋಹನ್ ಮಾಳವೀಯ ಅವರ ಪ್ರತಿಮೆಗೆ ಹೂ ಮಾಲೆ ಅರ್ಪಣೆ ಮಾಡಿದ ನಂತರ ರೋಡ್ ಶೋಗೆ ಚಾಲನೆ ದೊರೆಯಲಿದೆ ಎಂದು ವರದಿ ತಿಳಿಸಿದೆ.