ಕೊಲ್ಕತ್ತಾ: ಪ್ರಧಾನಿ ನರೇಂದ್ರ ಮೋದಿ ಅವರ ಕೇದಾರಾನಾಥ್ ಪ್ರವಾಸದ ಮಾಧ್ಯಮ ಪ್ರಸಾರ ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ಕಾಂಗ್ರೆಸ್ ಆರೋಪಿಸಿ ಕಾಂಗ್ರೆಸ್ ಸಂಸದ ಪ್ರದೀಪ್ ಭಟ್ಟಾಚಾರ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.
ಮೋದಿ ಪ್ರವಾಸದ ಮಾಧ್ಯಮ ಪ್ರಸಾರವನ್ನು ನಿಲ್ಲಿಸಬೇಕು ಮತ್ತು ಅದರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಅವರು ಆಯೋಗದ ಬಳಿ ಮನವಿ ಮಾಡಿಕೊಂಡಿದ್ದಾರೆ
ಮೋದಿ ಕೇದಾರಾನಾಥ ಪ್ರವಾಸದ ಮಾಧ್ಯಮ ಪ್ರಸಾರ ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ. ಮೋದಿ ಪ್ರವಾಸ ಎಲ್ಲಾ ಮಾಧ್ಯಮಗಳಲ್ಲಿಯೂ ಪ್ರಸಾರವಾಗಿದೆ. ಪ್ರತ್ಯೇಕ್ಷವಾಗಿ ಅಥವಾ ಪರೋಕ್ಷವಾಗಿ ಯಾರೂ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಬಾರದು, ಇದು ನ್ಯಾಯಯುತವಾದದ್ದು ಅಲ್ಲ ಎಂದಿದ್ದಾರೆ.
ಈ ಮಧ್ಯೆ ಟಿಡಿಪಿ ಕೂಡಾ ಪ್ರಧಾನಿ ನರೇಂದ್ರ ಮೋದಿಯಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಕೇದಾರಾನಾಥ ಹಾಗೂ ಬದರೀನಾಥ ದೇವಾಲಯಗಳಿಗೆ ಅಧಿಕೃತ ಭೇಟಿ ನೀಡಿರುವ ಮೋದಿ ಎಲ್ಲಾ ಖಾಸಗಿ ಚಟುವಟಿಕೆಗಳಲ್ಲಿ ತೊಡಗಿದ್ದು, ಅವುಗಳನ್ನು ನಿರಂತರವಾಗಿ ಮಾಧ್ಯಮಗಳಲ್ಲಿ ಪ್ರಸಾರ ಮಾಡುತ್ತಿರುವುದು ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ದೂರಿದೆ.
ಕೇದಾರನಾಥದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿರುವುದು ಅನೈತಿಕವಾಗಿದ್ದು, ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಟಿಎಂಸಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಉತ್ತರ್ ಖಂಡ್ ರಾಜ್ಯಕ್ಕೆ ಎರಡು ದಿನಗಳ ಭೇಟಿ ನೀಡಿರುವ ಪ್ರಧಾನಿ ಮೋದಿ ನಿನ್ನೆ ಕೇದಾರಾನಾಥಕ್ಕೆ ಭೇಟಿ ನೀಡಿದ್ದರು. ಇಂದು ಬದರೀನಾಥ್ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.
Advertisement