ಉತ್ತರ ಕರ್ನಾಟಕದ 14 ಕ್ಷೇತ್ರಗಳ ಬಹಿರಂಗ ಪ್ರಚಾರಕ್ಕೆ ತೆರೆ, ಮತದಾನಕ್ಕೆ ಕೌಂಟ್ ಡೌನ್ ಆರಂಭ

ಉತ್ತರ ಕರ್ನಾಟಕದ 14 ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ನಾಳೆ ಚುನಾವಣೆ ನಡೆಯಲಿದ್ದು, ಪ್ರಚಾರಕ್ಕೆ ನಿನ್ನೆ ಸಂಜೆ ತೆರೆ ಬಿದ್ದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಉತ್ತರ ಕರ್ನಾಟಕದ 14 ಕ್ಷೇತ್ರಗಳಿಗೆ  ಎರಡನೇ  ಹಂತದಲ್ಲಿ ನಾಳೆ ಚುನಾವಣೆ ನಡೆಯಲಿದ್ದು, ಪ್ರಚಾರಕ್ಕೆ ನಿನ್ನೆ ಸಂಜೆ ತೆರೆ ಬಿದ್ದಿದೆ. ಇದರೊಂದಿಗೆ  ಒಂದು ತಿಂಗಳಿನಿಂದ ನಡೆಯುತ್ತಿದ್ದ ರಾಜಕೀಯ ಪಕ್ಷಗಳ ಅಬ್ಬರದ ಪ್ರಚಾರ, ಮಾತಿನ ಸಮರ, ರೋಡ್ ಶೋ ಹಾಗೂ ಚುನಾವಣಾ ರಾಲಿ, ಭರವಸೆಗಳು ಅಂತಿಮವಾಗಿ ಸ್ಥಗಿತಗೊಂಡಿವೆ. ವಿವಿಧ ಪಕ್ಷಗಳ ಅಭ್ಯರ್ಥಿಗಳು ಇಂದು ಮನೆ ಮನೆ ಪ್ರಚಾರ ನಡೆಸಲಿದ್ದಾರೆ.

ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಕೊಪ್ಪಳ ಜಿಲ್ಲೆಯ ಗಡಿ ಭಾಗದಲ್ಲಿ ಕಾಂಗ್ರೆಸ್ ಪರವಾಗಿ ಪ್ರಚಾರ ನಡೆಸಿದರೆ, ಹಿರಿಯ ನಾಯಕ ಎಸ್.ಎಂ. ಕೃಷ್ಣ ಶಿವಮೊಗ್ಗದಲ್ಲಿ  ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ  ಬಿವೈ ರಾಘವೇಂದ್ರ ಪರವಾಗಿ ಪ್ರಚಾರ ನಡೆಸಿದರು. ಈ ಕ್ಷೇತ್ರದಲ್ಲಿ ತನ್ನ ಅಭ್ಯರ್ಥಿ ಮಧು ಬಂಗಾರಪ್ಪ ಅವರನ್ನು ಗೆಲ್ಲಿಸಿಕೊಳ್ಳಲು ಜೆಡಿಎಸ್ ತೀವ್ರ ಕಸರತ್ತಿನಲ್ಲಿ ತೊಡಗಿದೆ.

ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧಿಸಿರುವ ಕಲಬುರಗಿ ಕ್ಷೇತ್ರದಲ್ಲಿ ಬಿಜೆಪಿಯಿಂದ ತೀವ್ರ ಪೈಪೋಟಿ ಎದುರಾಗಿದ್ದು, ಗೆಲುವಿಗಾಗಿ ಖರ್ಗೆ ತೀವ್ರ ಹೋರಾಟ ನಡೆಸುತ್ತಿದ್ದಾರೆ. ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಬಾಗಲಕೋಟೆಯಲ್ಲಿ ಪ್ರಚಾರವನ್ನು ಅಂತ್ಯಗೊಳಿಸಿದರು.ಹಾಸನ, ಮಂಡ್ಯ, ತುಮಕೂರು ನಂತರ ಶಿವಮೊಗ್ಗ ಕ್ಷೇತ್ರದಲ್ಲಿ ಹೆಚ್ಚಿನ ಆಸಕ್ತಿ ವಹಿಸಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಪ್ರಚಾರ ನಡೆಸಿದ್ದಾರೆ.

ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗುಲ್ಬರ್ಗಾ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಮತ್ತು ಶಿವಮೊಗ್ಗದ ಕ್ಷೇತ್ರಗಳಿಗೆ ನಾಳೆ ಚುನಾವಣೆ ನಡೆಯಲಿದೆ. ಅಂದಾಜು 2 ಕೋಟಿ 43 ಲಕ್ಷದ 03 ಸಾವಿರದ 279 ಮತದಾರರ ಮತ ಚಲಾಯಿಸಲಿದ್ದು, 237 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com