ಕೊಪ್ಪಳ: ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಸ್ವಯಂ ಘೋಷಿತ ಕುರುಬ ನಾಯಕರಾಗಿದ್ದು, ಮಹಾನ್ ಜಾತಿವಾದಿ ಎಂದು ಬಿಜೆಪಿ ಹಿರಿಯ ಮಖಂಡ ಕೆ.ಎಸ್. ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗೋಷ್ಛಿಯಲ್ಲಿಂದು ಮಾತನಾಡಿದ ಅವರು ಸಿದ್ದರಾಮಯ್ಯ ಹಾಗೂ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ವಿರುದ್ಧ ತೀವ್ರ ವಾಕ್ ಪ್ರಹಾರ ನಡೆಸಿದರು.ಸಿದ್ದರಾಮಯ್ಯ ಕೋಮುವಾದಿ, ಕೊಲೆಗಡುಕು, ಅವರ ತಲೆಯಲ್ಲಿ ಸಗಣಿ ತುಂಬಿಕೊಂಡಿದೆ ಎಂದು ಕಿಡಿಕಾರಿದರು.
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ 125 ಕೋಟಿ ರೂ. ವೆಚ್ಚದಲ್ಲಿ ಜಾತಿಗಣತಿ ಮಾಡಲಾಗಿತ್ತು. ಆ ವರದಿ ಸರ್ಕಾರದ ಮುಂದೆ ಇದ್ದರೂ ಸಹ ಇನ್ನೂ ಏಕೆ ಬಿಡುಗಡೆ ಮಾಡುತ್ತಿಲ್ಲ.ಕುರುಬ ಸಮುದಾಯವನ್ನು ಕೇವಲ ರಾಜಕಾರಣಕ್ಕಾಗಿ ಮಾತ್ರ ಬಳಕೆ ಮಾಡುತ್ತಿರುವ ಮಹಾಪುರುಷ ಸಿದ್ದರಾಮಯ್ಯ ಎಂದು ಈಶ್ವರಪ್ಪ ಲೇವಡಿ ಮಾಡಿದರು.
ಸಿದ್ದರಾಮಯ್ಯ ಕುರುಬರಿಗಾಗಲೀ, ಅಹಿಂದ ವರ್ಗಕ್ಕಾಗಲೀ ಬಿಜೆಪಿ ನೀಡಿದ್ದಕ್ಕಿಂತ 1 ರೂ. ಕೂಡ ಹೆಚ್ಚು ನೀಡಿಲ್ಲ. ಬಿಜೆಪಿಗಿಂತ ಹೆಚ್ಚು ಅನುದಾನ ನೀಡಿದ್ದರ ಬಗ್ಗೆ ಕಾಂಗ್ರೆಸ್ ದಾಖಲೆ ನೀಡಿದ್ದರೆ ತಾವು ರಾಜಕೀಯ ಸನ್ಯಾಸತ್ವ ಸ್ವೀಕರಿಸುವುದಾಗಿ ಸವಾಲು ಹಾಕಿದರು.
ರಾಜ್ಯದಲ್ಲಿ ಬಿಜೆಪಿ ಮುಸ್ಲಿಂರಿಗೆ ಟಿಕೆಟ್ ಕೊಟ್ಟಿಲ್ಲ. ರಾಜ್ಯದ ಮುಸ್ಲಿಂರು ನಮ್ಮ ಪಕ್ಷದ ಮೇಲೆ ವಿಶ್ವಾಸ ಇಟ್ಟುಕೊಂಡಿಲ್ಲ. ಅವರು ನಮ್ಮನ್ನು ನಂಬಿ ವೋಟ್ ಕೊಟ್ಟಾಗ ಮಾತ್ರ ಟಿಕೆಟ್ ಕೊಡಬಹುದು ಎಂದರು.
Advertisement