ಬೆಂಗಳೂರು: ಏಪ್ರಿಲ್ 18 ರಂದು ಮೊದಲ ಹಂತದ ಲೋಕಸಭೆ ಚುನಾವಣೆ ಮುಗಿದಿದ್ದು, ಕಾಂಗ್ರೆಸ್-ಜೆಡಿಎಸ್ ಹಾಗೂ ಬಿಜೆಪಿ ಅತ್ಯಧಿಕ ಮತಗಳ ಅಂತರದಿಂದ ಗೆಲ್ಲುವುದಾಗಿ ಘೋಷಿಸಿವೆ.
ಮೊದಲ ಹಂತದಲ್ಲಿ ಚುನಾವಣೆ ನಡೆದ 14 ಕ್ಷೇತ್ರಗಳ ಪೈಕಿ 11 ಕ್ಷೇತ್ರ ಮೈತ್ರಿ ಪಕ್ಷದ ಪಾಲಾಗಲಿವೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ದಕ್ಷಿಣ ಕರ್ನಾಟಕದಲ್ಲಿ ಮೈತ್ರಿ ಪಕ್ಷ ಪ್ರಬಲವಾಗಿದೆ, ಹಳೇ ಮೈಸೂರು ಭಾಗ ಸೇರಿದಂತೆ ಹಲವು ಭಾಗಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮೈತ್ರಿ ಪಕ್ಷ ಗೆಲುವು ಸಾಧಿಸಲಿದೆ ಎಂದು ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಹೇಳಿದ್ದಾರೆ,
ಇನ್ನೂ ದೇವೇಗೌಡರು ಕೂಡ 14 ರಲ್ಲಿ 10 ಸೀಟು ಗೆಲ್ಲುವುದಾಗಿ ಹೇಳಿದ್ದಾರೆ. ಇನ್ನೂ ಬಿಜೆಪಿ ಕೂಡ 8-10 ಸೀಟು ಗೆಲ್ಲುವ ವಿಶ್ವಾಸ ವ್ಯಕ್ತ ಪಡಿಸಿದೆ. ಹಲವು ಭಾಗದಲ್ಲಿ ಉತ್ತಮ ಪ್ರಮಾಣದಲ್ಲಿ ಮತದಾನವಾಗಿದ್ದು ಬಿಜೆಪಿ ಹೆಚ್ಚಿನ ಸೀಟು ಗೆಲ್ಲಲಿದೆ ಎಂದು ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಬಿಜೆಪಿ ಮುಖಂಡ ಸಿ.ಟಿ ರವಿ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ಕೂಡ ತಮ್ಮ ಪಕ್ಷ ಗೆಲ್ಲುವ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ,
ಕಾಂಗ್ರೆಸ್ ಗೆ ಜೆಡಿಎಸ್ ಮತಗಳ ವರ್ಗಾವಣೆಯಿಂದ ಹೆಚ್ಚಿನ ಪ್ರಮಾಣದಲ್ಲಿ ಲಾಭವಾಗಲಿದೆ, ಮಂಡ್ಯ, ಹಾಸನ, ಮತ್ತು ತುಮಕೂರುಗಳಲ್ಲಿ ಕಾಂಗ್ರೆಸ್ ನಿಂದ ಜೆಡಿಎಸ್ ಗೆ ಪ್ರಯೋಜನವಾಗಲಿದೆ ಎಂದು ರಾಜಕೀಯ ವಿಶ್ಲೇಷಕ ಬಿ.ಎಸ್ ಮೂರ್ತಿ ಹೇಳಿದ್ದಾರೆ.