ಈ ನಡುವೆ ಯುಎನ್ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ಪ್ರಧಾನಿ ನರೇಂದ್ರ ಮೋದಿ, ಇತರೆ ಬಿಜೆಪಿ ನಾಯಕರು ಪ್ರಚಾರ ಮಾಡಿದ ಮಾತ್ರಕ್ಕೆ ಬಿಜೆಪಿ ಗೆಲ್ಲುತ್ತದೆ, ನನಗೆ ಸೋಲಾಗುತ್ತದೆ ಎಂಬ ಅಂಜಿಕೆ, ಅಳುಕು ನನಗಿಲ್ಲ. ಕ್ಷೇತ್ರದ ಜನ ನನ್ನನ್ನು ಅರ್ಥ ಮಾಡಿಕೊಂಡಿದ್ದಾರೆ. ನಾನು ಮಾಡಿದ ಕೆಲಸ ಮತ್ತು ಸಾಧನೆಗಳ ಆಧಾರದ ಮೇಲೆ ಮತ ಕೇಳುತ್ತಿದ್ದೇನೆ ಎಂದು ಹೇಳಿದ್ದಾರೆ. ಹಿಂದುಳಿದ ಹೈದರಾಬಾದ್ – ಕರ್ನಾಟಕ ಪ್ರದೇಶಕ್ಕೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಈ ಭಾಗದ ಜನರಿಗೆ ಮತ್ತು ವಿದ್ಯಾರ್ಥಿಗಳಿಗೆ ವಿಶೇಷ ಸ್ಥಾನಮಾನ ನೀಡಲು ಸಂವಿಧಾನದ 371 (ಜೆ) ಕಲಂಗೆ ತಿದ್ದುಪಡಿ ತರಲು ಹೋರಾಟ ಮಾಡಿರುವುದನ್ನು ಈ ಭಾಗದ ಜನರು ಮರೆಯುವುದಿಲ್ಲ. ಇದರ ಜೊತೆಗೆ ಈ ಭಾಗಕ್ಕೆ ಅನೇಕ ಹೊಸ ಯೋಜನೆಗಳನ್ನು ತಂದಿದ್ದೇನೆ. ರಾಷ್ಟ್ರೀಯ ಹೆದ್ದಾರಿ, ರೈಲ್ವೆ ಯೋಜನೆಗಳು ಮತ್ತು ವಿಮಾನ ಸಂಪರ್ಕದ, ಹೊಸ ನೀರಾವರಿ ಯೋಜನೆಗಳ ಸೌಲಭ್ಯ ಕಲ್ಪಿಸಲಾಗಿದೆ” ಎಂದು ಅವರು ತಮ್ಮ ಸಾಧನೆಗಳ ಪಟ್ಟಿಯನ್ನು ಬಿಚ್ಚಿಟ್ಟಿದ್ದಾರೆ. ಜೊತೆಗೆ ಕ್ಷೇತ್ರದ ಜನತೆ ತಮ್ಮ ಕೊಡುಗೆಯನ್ನು ಅರಿತುಕೊಂಡಿದ್ದಾರೆ ಎಂದು ಖರ್ಗೆ ಹೇಳಿಕೊಂಡಿದ್ದಾರೆ.