ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಅತೃಪ್ತ ಮುಖಂಡರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಬಂಡಾಯದ ಬೇಗುದಿಯಲ್ಲಿ ಬೇಯುತ್ತಿದೆ.
ತುಮಕೂರು ಸಂಸದ ಮುದ್ದಹನುಮೇಗೌಡ ಪ್ರಮುಖ ಬಂಡಾಯ ಮುಖಂಡರಾಗಿದ್ದು, ಸ್ವತಂತ್ರ ಅಭ್ಯರ್ಥಿಯಾಗಿ ನಾಳೆ ನಾಮಪತ್ರ ಸಲ್ಲಿಸುವುದಾಗಿ ಘೋಷಿಸಿದ್ದಾರೆ.
ಮಾಜಿ ಸಂಸದ ಹಾಗೂ ರಾಷ್ಟ್ರೀಯ ಅಲ್ಪಸಂಖ್ಯಾತ ಆಯೋಗದ ಉಪಾಧ್ಯಕ್ಷ ಹೆಚ್ ಟಿ ಸಾಂಗ್ಲಿಯಾನಾ ಕೂಡಾ ಟಿಕೆಟ್ ದೊರೆಯದಿರುವುದಕ್ಕೆ ಅಸಮಾಧಾನಗೊಂಡಿದ್ದು, ಅವರ ಮುಂದಿನ ನಡೆ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಮಂಡ್ಯದಲ್ಲಿ ಅನೇಕ ಕಾಂಗ್ರೆಸ್ ಮುಖಂಡರು ವರಿಷ್ಠರ ವಿರುದ್ಧ ಅಸಮಾಧಾನಗೊಂಡಿದ್ದಾರೆ. ಸುಮಲತಾ ಅವರ ಜೊತೆಗೆ ಗುರುತಿಸಿಕೊಂಡಿದ್ದ ಸಚ್ಚಿದಾನಂದ ಅವರನ್ನು ಉಚ್ಚಾಟಿಸಲಾಗಿದೆ.ಇದಕ್ಕೆ ಕ್ಯಾರೆ ಎನ್ನದ ಕಾಂಗ್ರೆಸ್ ಮುಖಂಡರು ಸುಮಲತಾ ಅವರ ಬೆಂಬಲಕ್ಕಿಳಿದಿದ್ದಾರೆ.
ಅತ್ತ ಕೋಲಾರದಲ್ಲಿ ಏಳು ಬಾರಿ ಸಂಸದರಾಗಿರುವ ಕೆಎಚ್ ಮುನಿಯಪ್ಪ ಅವರಿಗೆ ಈ ಬಾರಿಯೂ ಟಿಕೆಟ್ ನೀಡಿರುವುದು ಸ್ಥಳೀಯ ಮುಖಂಡರ ಅತೃಪ್ತಿಗೆ ಕಾರಣವಾಗಿದೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರನ್ನು ಪ್ರಶ್ನಿಸಿದರೆ, ಕೆಲವರು ಹಿರಿಯರಾಗಿರುವುದರಿಂದ ಮಣೆ ಹಾಕಲಾಗಿದೆ ಎನ್ನುತ್ತಾರೆ.
ಈ ನಡುವೆ ಮುದ್ದಹನುಮೇಗೌಡರ ಜೊತೆಗೆ ಮಾತುಕತೆ ನಡೆಸುವುದಾಗಿ ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ ತಿಳಿಸಿದ್ದಾರೆ.