ಬೆಂಗಳೂರು: 224 ಸದಸ್ಯ ಬಲದ ವಿಧಾನಸಭೆಗೆ ನಡೆದ ಚುನಾವಣೆಗೆ ಇಂದು ಮತ ಎಣಿಕೆಗೆ ಕೌಂಟ್ಡೌನ್ ಶುರುವಾಗಿದ್ದು, ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳಲ್ಲಿ ತೀವ್ರ ಕುತೂಹಲ ಉಂಟಾಗಿದೆ. ಬಹುತೇಕ ಚುನಾವಣೋತ್ತರ ಸಮೀಕ್ಷೆಗಳಲ್ಲಿ ಕಾಂಗ್ರೆಸ್ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಲಿರುವ ಸುಳಿವು ನೀಡಿದ್ದು, ಅತಂತ್ರ ವಿಧಾನಸಭೆ ರಚನೆಯಾಗಲಿದೆ ಎಂದು ಭವಿಷ್ಯ ನುಡಿದಿವೆ.
ಈ ಕುರಿತು ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ, ಕರ್ನಾಟಕದಲ್ಲಿ ಕಾಂಗ್ರೆಸ್ ಸಂಪೂರ್ಣ ಬಹುಮತ ಪಡೆದು ಸರ್ಕಾರ ರಚಿಸಲಿದೆ. ನಾವೇ ಸರ್ಕಾರ ರಚಿಸುತ್ತೇವೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.
ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ನಾವು ಏನು ಬೇಕಾದರೂ ಮಾಡುತ್ತೇವೆ. ಕರ್ನಾಟಕದ ಹಿತದೃಷ್ಟಿಯಿಂದ ನನ್ನ ತಂದೆ ಮುಖ್ಯಮಂತ್ರಿ ಆಗಬೇಕು ಎಂದು ಹೇಳಿದರು.
ಚುನಾವಣೋತ್ತರ ಸಮೀಕ್ಷೆಗಳು ಕಾಂಗ್ರೆಸ್ಗೆ ಅಧಿಕ ಸ್ಥಾನ ಸಿಗುತ್ತದೆ ಎಂದಿದ್ದರೂ, ಸಮೀಕ್ಷೆಗಳು ಸುಳ್ಳಾಗುತ್ತವೆ. ತಾವೇ ಬಹುಮತದೊಂದಿಗೆ ತಾವೇ ಸರ್ಕಾರ ರಚಿಸುತ್ತೇವೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಕೆಲ ಸಮೀಕ್ಷೆಗಳಲ್ಲಿ ಮಾತ್ರ ಕಾಂಗ್ರೆಸ್ಗೆ ಬಹುಮತ ಲಭ್ಯವಾಗುತ್ತದೆ ಎಂದಿದ್ದು, ಇನ್ನೆರಡು ಸಮೀಕ್ಷೆಗಳು ಬಿಜೆಪಿಗೆ ಬಹುಮತ ಸಿಗುತ್ತದೆ ಎಂದಿವೆ.
ಈ ಮಧ್ಯೆ, ಕಾದು ನೋಡುವ ತಂತ್ರವನ್ನು ಅನುಸರಿಸಿರುವ ಜೆಡಿಎಸ್, ತಾನೇ ಕಿಂಗ್ ಮೇಕರ್ ಆಗುವ ಕನಸನ್ನು ಕಾಣುತ್ತಿದೆ. ಈ ಬಾರಿಯೂ 2018ರ ಚುನಾವಣೆಯಂತೆ ಮತ್ತೆ ಅತಂತ್ರ ಸ್ಥಿತಿ ನಿರ್ಮಾಣವಾಗಬಹುದೇ ಎಂಬ ಚರ್ಚೆ ಸದ್ಯ ರಾಜ್ಯದಲ್ಲಿ ನಡೆಯುತ್ತಿದೆ.
Advertisement