ಬೆಂಗಳೂರು: ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದರಿಂದ ಸರಣಿ ಮರುಪರೀಕ್ಷೆಗಳ ಸಮಸ್ಯೆ ಎದುರಿಸುತ್ತಿರುವ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಮತ್ತಷ್ಟು ಸಮಸ್ಯೆ ಎದುರಾಗುವ ಲಕ್ಷಣ ಗೋಚರಿಸುತ್ತಿದೆ.
ಬೇಡಿಕೆ ಈಡೇರಿಕೆಯಾಗ ಕಾರಣ ಶಿಕ್ಷಕರು ಪ್ರತಿಭಟನೆ ನಡೆಸಲು ಮುಂದಾಗಿದ್ದು,
ಏ.3 ರಿಂದ (ಭಾನುವಾರ) ಪ್ರಾರಂಭವಾಗಿದ್ದ ಮೌಲ್ಯಮಾಪನ ಪ್ರಕ್ರಿಯೆಯನ್ನು ಬಹಿಷ್ಕರಿಸಿದ್ದಾರೆ. ಇದರಿಂದಾಗಿ ಪಿಯು ವಿದ್ಯಾರ್ಥಿಗಳಿಗೆ ಆತಂಕ ಹೆಚ್ಚಾಗಿದೆ. ಇನ್ನು ಮಾ.30 ರಿಂದ ಪರೀಕ್ಷೆ ಬರೆಯುತ್ತಿರುವ 10 ನೇ ತರಗತಿ ವಿದ್ಯಾರ್ಥಿಗಳಿಗೂ ಇದೇ ಸಮಸ್ಯೆ ಎದುರಾಗಿದ್ದು, 10 ನೇ ತರಗತಿಯ ಶಿಕ್ಷಕರೂ ಮೌಲ್ಯಮಾಪನವನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರೆ. ಇದರಿಂದಾಗಿ ಕಾಲೇಜುಗಳಿಗೆ ಪ್ರವೇಶ ಪ್ರಕ್ರಿಯೆ ವಿಳಂಬವಾಗಲಿದ್ದು 10 ನೇ ತರಗತಿ ವಿದ್ಯಾರ್ಥಿಗಳು ಸಮಸ್ಯೆ ಎದುರಿಸಬೇಕಾಗುವ ಸಾಧ್ಯತೆಗಳಿವೆ.
ತಮ್ಮ ಬೇಡಿಕೆ ಈಡೇರಿಕೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ನಡೆದ ಸಭೆ ವಿಫಲವಾಗಿರುವ ಕಾರಣ ಪದವಿ ಪೂರ್ವ ಕಾಲೇಜು ಪ್ರಾಧ್ಯಾಪಕರ ಸಂಘದ ಪ್ರಾಧ್ಯಾಪಕರು ಈಗಾಗಲೇ ಮೌಲ್ಯಮಾಪನ ಪ್ರಕ್ರಿಯೆಯನ್ನು ಬಹಿಷ್ಕರಿಸುವುದಾಗಿ ಘೋಷಿಸಿದ್ದಾರೆ. ಆದರೆ ಪದವಿ ಪೂರ್ವ ಉಪನ್ಯಾಸಕರ ಒಕ್ಕೂಟಕ್ಕೆ ಸೇರಿದ ಪ್ರಾಧ್ಯಾಪಕರು ಮೌಲ್ಯಮಾಪನ ಪ್ರಕ್ರಿಯೆಯನ್ನು ಬಹಿಷ್ಕರಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಪ್ರೌಢಶಾಲೆ ಶಿಕ್ಷಕರೂ ಸಹ ಏ.18 ರಿಂದ ಪ್ರಾರಂಭವಾಗಲಿರುವ ಮೌಲ್ಯಮಾಪನ ಪ್ರಕ್ರಿಯೆಯನ್ನು ಬಹಿಷ್ಕರಿಸುವ ಎಚ್ಚಕೆ ನೀಡಿದ್ದಾರೆ. ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ತೊಡಗಲು ಅರ್ಹತೆ ಇರುವ ಸುಮಾರು 40,000 ಪ್ರೌಢಶಾಲಾ ಶಿಕ್ಷಕರು ಮೌಲ್ಯಮಾಪನ ಪ್ರಕ್ರಿಯೆಯನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನೊಂದಿಗೆ ಮಾತನಾಡಿರುವ ಸಂಘದ ಅಧ್ಯಕ್ಷ ಹೆಚ್ ಕೆ ಮಂಜುನಾಥ್, ಸರ್ಕಾರ ನಮ್ಮ ಬೇಡಿಕೆಗಳನ್ನು ಹಲವು ವರ್ಷಗಳಿಂದ ಈಡೇರಿಸದೇ ಇರುವ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಲಿದ್ದೇವೆ ಎಂದು ಹೇಳಿದ್ದಾರೆ.
Advertisement