ಮಂಗಳೂರು: ಮಂಗಳೂರಿನ ಶ್ರೀನಿವಾಸ ಫಾರ್ಮಸಿ ಕಾಲೇಜ್ ನಲ್ಲಿ ಹಿಜಾಬ್ ಧರಿಸುವುದಕ್ಕೆ ನಿರ್ಬಂಧ ವಿಧಿಸಿರುವುದನ್ನು ವಿರೋಧಿಸಿ, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ನೇತೃತ್ವದಲ್ಲಿ ಕೆಲವು ವಿದ್ಯಾರ್ಥಿಗಳ ಪೋಷಕರು, ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.
ಹಿಜಾಬ್ ಧರಿಸುವುದಕ್ಕೆ ನಿರ್ಬಂಧವಿಧಿಸುವ ಮೂಲಕ ಕಾಲೇಜು ಆಡಳಿತ ಮಂಡಳಿ ಧಾರ್ಮಿಕ ಹಕ್ಕುಗಳನ್ನು ಕಸಿಯುತ್ತಿದೆ ಎಂದು ಪ್ರತಿಭಟನಾ ನಿರತ ಪೋಷಕರು, ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಅಷ್ಟೇ ಅಲ್ಲದೆ, ಶುಕ್ರವಾರದಂದು ಮುಸ್ಲಿಂ ವಿದ್ಯಾರ್ಥಿಗಳಿಗೆ ಪ್ರಾರ್ಥನೆ ಸಲ್ಲಿಸುವುದಕ್ಕಾಗಿ ಹೆಚ್ಚಿನ ಸಮಯ ನೀಡಬೇಕು ಎಂದು ಮನವಿ ಸಲ್ಲಿಸಿದರೂ ಸಮಯಾವಕಾಶ ನೀಡಲಾಗುತ್ತಿಲ್ಲ ಎಂದು ಪೋಷಕರು ಆಡಳಿತ ಮಂಡಳಿ ವಿರುದ್ಧ ಆರೋಪ ಮಾಡಿದ್ದಾರೆ.
ಹಿಜಾಬ್ ಧರಿಸುವುದು ಹಾಗು ಶುಕ್ರವಾರಗಳಂದು ವಿದ್ಯಾರ್ಥಿಗಳಿಗೆ ಊಟದ ವಿರಾಮದ ವೇಳೆ ಹೆಚ್ಚಿನ ಸಮಯ ನೀಡುವುದರ ಬಗ್ಗೆ ನಿರ್ಧರಿಸಲು ಆಡಳಿತ ಮಂಡಳಿಗೆ ಎರಡು ವಾರಗಳಷ್ಟು ಕಾಲಾವಕಾಶ ನೀಡಲಾಗಿತ್ತು. ಆದರೂ ಸಹ ಆಡಳಿತ ಮಂಡಳಿ ಯಾವುದೇ ನಿರ್ಧಾರ ಕೈಗೊಳ್ಳದ ಕಾರಣ ಪೋಷಕರು, ವಿದ್ಯಾರ್ಥಿಗಳು ವಳಚ್ಚಿಲ್ನಲ್ಲಿರುವ ಶ್ರೀನಿವಾಸ ಫಾರ್ಮಸಿ ಕಾಲೇಜ್ ನ ಕ್ಯಾಂಪಸ್ ನಲ್ಲಿ ಪ್ರತಿಭಟನೆ ನಡೆಸಿದ್ದಾರೆ.
Advertisement