ಬೆಂಗಳೂರು: ಆಂಧ್ರ ಪ್ರದೇಶ ಮೂಲದ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ, ವಂಚನೆ ಮಾಡಿದ ಆರೋಪದ ಎದುರಿಸುತ್ತಿದ್ದ ಸಂಖ್ಯಾಶಾಸ್ತ್ರಜ್ಞ ಆರ್ಯವರ್ಧನ ಅವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ಖಾಸಗಿ ಸುದ್ದಿಮಾಧ್ಯಮವೊಂದು ವರದಿ ಮಾಡಿರುವಂತೆ ಆರ್ಯವರ್ಧನ ಗುರೂಜಿಯನ್ನು ತಮಿಳುನಾಡಿನಲ್ಲಿ ಬಂಧಿಸಲಾಗಿದ್ದು, ದೇವಾಲಯಕ್ಕೆ ತೆರಳಿ ವಾಪಸಾಗುತ್ತಿದ್ದಾಗ ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಇನ್ಸ್ ಪೆಕ್ಟರ್ ಶಿವಾರೆಡ್ಡಿ ನೇತೃತ್ವದ ಬೆಂಗಳೂರಿನ ರಾಜರಾಜೇಶ್ವರಿ ನಗರದ ಪೊಲೀಸರ ತಂಡ ತಮಿಳುನಾಡಿನಲ್ಲಿ ಕಾರ್ಯಾಚರಣೆ ಆರ್ಯವರ್ಧನ ಗುರೂಜಿಯನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಪೊಲೀಸ್ ಮೂಲಗಳ ಪ್ರಕಾರ ಕಳೆದ ಆಗಸ್ಟ್ 21ರಂದು ತಮ್ಮ ನಿವಾಸಕ್ಕೆ ಸಂಖ್ಯಾಶಾಸ್ತ್ರ ತರಬೇತಿಗೆ ಬಂದಿದ್ದ ಆಂಧ್ರಪ್ರದೇಶ ಮೂಲದ ಮಹಿಳೆ ಮೇಲೆ ಗುರೂಜಿ ಅತ್ಯಾಚಾರಕ್ಕೆ ಯತ್ನಿಸಿದ್ದರು. ಡಿಸೆಂಬರ್ 10ರಂದು ಮಹಿಳೆ ರಾಜರಾಜೇಶ್ವರಿ ನಗರ ಠಾಣೆ ಪೊಲೀಸರಿಗೆ ಲೈಂಗಿಕ ಕಿರುಕುಳ, ವಂಚನೆ, ಪ್ರಾಣಬೆದರಿಕೆ ದೂರು ದಾಖಲಿಸಿದ್ದರು. ಐ.ಪಿ.ಸಿ. ಸೆಕ್ಷನ್ 354, 420, 506, 504 ರ ಅಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಗುರೂಜಿ ಬಂಧನಕ್ಕೆ 2 ವಿಶೇಷ ತಂಡಗಳನ್ನು ರಚಿಸಿದ್ದರು. ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ ಗುರೂಜಿಯನ್ನು ನಿನ್ನೆ ರಾತ್ರಿ ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಪಶ್ಚಿಮ ವಲಯ ಡಿಜಿಪಿ ಅನುಚೇತ್ ಅವರ ನೇತೃತ್ವದಲ್ಲಿ ಆರ್ಯವರ್ಧನ ವಿಚಾರಣೆ ನಡೆಸಲಾಗುತ್ತಿದೆ.
Advertisement