ಸಿಎಂ ಆಪ್ತರ ವಿರುದ್ಧ ಪ್ರಕರಣ ದಾಖಲಿಸಿದ ಮೈಸೂರು ಡಿಸಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರ ವಿರುದ್ಧ ಮೈಸೂರು ಜಿಲ್ಲಾಧಿಕಾರಿ ಸಿ. ಶಿಖಾ ಅವರು ಪ್ರಕರಣ ದಾಖಲಿಸಿರುವುದಾಗಿ ತಿಳಿದುಬಂದಿದೆ...
ಮೈಸೂರು ಜಿಲ್ಲಾಧಿಕಾರಿ ಸಿ. ಶಿಖಾ
ಮೈಸೂರು ಜಿಲ್ಲಾಧಿಕಾರಿ ಸಿ. ಶಿಖಾ
Updated on

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಸ್ನೇಹಿತನ ವಿರುದ್ಧ ಮೈಸೂರು ಜಿಲ್ಲಾಧಿಕಾರಿ ಸಿ. ಶಿಖಾ ಅವರು ಪ್ರಕರಣ ದಾಖಲಿಸಿರುವುದಾಗಿ ತಿಳಿದುಬಂದಿದೆ.

ಇಫ್ತಾರ್ ಕೂಟಕ್ಕೆ ತೆರಳಿದ್ದ ಸಿದ್ದರಾಮಯ್ಯ ಅವರು ಮೈಸೂರಿನ ಸರ್ಕಾರಿ ಅತಿಥಿ ಗೃಹದಲ್ಲಿ ತಂಗಿದ್ದರು. ಈ ವೇಳೆ ಸಿಎಂ ಆಪ್ತ ಮರಿಗೌಡ ಮೈಸೂರು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಮತ್ತವರ ಹಿಂಬಾಲಕರು ಮೈಸೂರು ಜಿಲ್ಲಾಧಿಕಾರಿ ಸಿ,ಶಿಖಾ ಅವರಿಗೆ ಮುಖ್ಯಮಂತ್ರಿಗಳ ಮುಂದೆಯೇ ಬೆದರಿಕೆ ಹಾಕಿದ್ದರು.

ಈ ಹಿನ್ನೆಲೆಯಲ್ಲಿ ಶಿಖಾ ಅವರು ಕಾಂಗ್ರೆಸ್ ನಾಯಕ ಮರೀಗೌಡ ಮತ್ತಿಬ್ಬರ ವಿರುದ್ಧ ಮೈಸೂರಿನ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ನಿನ್ನೆ ಪ್ರಕರಣ ದಾಖಲಿಸಿದ್ದಾರೆಂದು ಹೇಳಲಾಗುತ್ತಿದೆ.

ಮರೀಗೌಡ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಪ್ತರಾಗಿದ್ದಾರೆ. ಇಫ್ತಾರ್ ಕೂಟ ಹಿನ್ನೆಲೆಯಲ್ಲಿ ಮೈಸೂರಿಗೆ ಸಿದ್ದರಾಮಯ್ಯ ಅವರು ಭೇಟಿ ನೀಡಿದ್ದ ಸಂದರ್ಭದಲ್ಲಿ ಶಿಖಾ ಅವರ ವಿರುದ್ಧ ಮರೀಗೌಡ ಅವರು ದೂರು ಹೇಳಿದ್ದರು. ಯಾದಗಿರಿ ಉಪ ವಿಭಾಗಾಧಿಕಾರಿಯಾಗಿ ಬಡ್ತಿ ಹೊಂದಿ ವರ್ಗಾವಣೆಯಾಗಿರುವ ನವೀನ್ ಜೋಸೆಫ್ ಅವರನ್ನು ತಹಶೀಲ್ದಾರ್ ಹುದ್ದೆಯಿಂದ ಜಿಲ್ಲಾಧಿಕಾರಿ ಬಿಡುಗಡೆ ಮಾಡುತ್ತಿಲ್ಲ ಎಂದು ಹೇಳಿದ್ದರು. ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಮರೀಗೌಡ ಅವರು ಕೆಲಹೊತ್ತು ಮಾತುಕತೆ ನಡೆಸಿದ್ದರು.

ಇದರಂತೆ ಡಿಸಿ. ಶಿಖಾ ಅವರು ಇದೇ ವಿಚಾರವನ್ನು ಮುಖ್ಯಮಂತ್ರಿಗಳ ಎದುರು ಪ್ರಸ್ತಾಪ ಮಾಡಿದಾಗ ಸಿಟ್ಟಿಗೆದ್ದ ಮರೀಗೌಡ ಅವರು ಶಿಖಾ ಅವರ ವಿರುದ್ಧ ಏಕವಚನದಲ್ಲಿ ನಿಂದಿಸಿದ್ದರು. ನಂತರ ಮರೀಗೌಡ ಅವರ ಬೆಂಬಲಿಗರು ಜಿಲ್ಲಾಧಿಕಾರಿ ವಿರುದ್ಧ ಘೋಷಣೆ ಕೂಗುತ್ತ ಕಾರನ್ನು ಅಡ್ಡಹಾಕಿದ್ದರು. ಇದಕ್ಕೆ ಉತ್ತರ ನೀಡಿದ್ದ ಶಿಖಾ ಅವರು ಆಡಳಿತ ಕುರಿತ ವಿಚಾರವನ್ನು ಮರೀಗೌಡ ಅವರಿಗೆ ವಿವರಣೆ ನೀಡುವ ಅಗತ್ಯವಿಲ್ಲ ಎಂದು ಹೇಳಿದ್ದರು.

ಪ್ರಕರಣ ಕುರಿತು ಶಿಖಾ ಅವರನ್ನು ಈಗಾಗಲೇ ಸಂಪರ್ಕಿಸಲಾಗಿದ್ದು, ಈ ವರೆಗೂ ಅವರು ಯಾವುದೇ ರೀತಿಯ ಪ್ರತಿಕ್ರಿಯೆಗಳನ್ನು ಅವರು ನೀಡಿಲ್ಲ.

ಪ್ರಸ್ತುತ ಪ್ರಕರಣ ಸಂಬಂಧ ಮರೀಗೌಡ ಹಾಗೂ ಮತ್ತಿಬ್ಬರ ವಿರುದ್ಧ ಐಪಿಸಿ ಸೆಕ್ಷನ್ 143 (ಕಾನೂನುಬಾಹಿರ ಸಭೆ), 147 (ಗಲಭೆ), 504 (ಉದ್ದೇಶಪೂರ್ವಕ ಅವಮಾನ ಮತ್ತು ಸಾರ್ವಜನಿಕ ಶಾಂತಿಗೆ ಭಂಗ, ಪ್ರಚೋದನೆ), 353 (ಸಾರ್ವಜನಿಕ ಸೇವಕರಿಗೆ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

ಪ್ರಕರಣ ಸಂಬಂಧ ಉಪ ಆಯುಕ್ತ ಹೆಚ್.ಟಿ ಶೇಖರ್ ಅವರು ಕೂಡ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ. ಮರೀಗೌಡ ಅವರನ್ನು ಬಂಧನಕ್ಕೊಳಪಡಿಸಲಾಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿರುವ ಅವರು, ಪ್ರಸ್ತುತ ಮೈಸೂರು ರಕ್ಷಣಾ ವೇದಿಕೆ ಕಾರ್ಯಕರ್ತರು ಮರೀಗೌಡ ಅವರನ್ನು ಬಂಧನಕ್ಕೊಳಪಡಿಸುವಂತೆ ಪ್ರತಿಭಟನೆ ನಡೆಸುತ್ತಿದ್ದಾರೆ. ಮುಂದಿನ ಬೆಳವಣಿಗೆ ನೋಡಿ ನಂತರ ಯಾವ ರೀತಿಯ ಕ್ರಮ ಕೈಗೊಳ್ಳಬೇಕೆಂಬುದನ್ನು ನಿರ್ಧರಿಸಲಾಗುತ್ತದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com