ಅಕ್ರಮ ಮರುಳು ಸಾಗಾಣಿಕೆ ಪ್ರಕರಣ: ಲೋಕಾಯುಕ್ತ ಪೊಲೀಸರಿಗೆ 'ಹೈ' ನೋಟಿಸ್
ಬೆಂಗಳೂರು: ಲೋಕೋಪಯೋಗಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಪುತ್ರ ಸುನೀಲ್ ಬೋಸ್ ಸಲ್ಲಿಸಿದ್ದ ಅರ್ಜಿ ಸಂಬಂಧಿಸಿದಂತೆ ಹೈಕೋರ್ಟ್ ಸೋಮವಾರ ಲೋಕಾಯುಕ್ತ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ.
ತಮ್ಮ ವಿರುದ್ಧ ದಾಖಲಾಗಿರುವ ಅಕ್ರಮ ಮರಳು ಗಣಿಗಾರಿಕೆ ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ಸುನೀಲ್ ಬೋಸ್ ಹೈಕೋರ್ಟ್ ಮೆಟ್ಟಿಲೇರಿದ್ದರು.
ಇದರಂತೆ ಅರ್ಜಿಯನ್ನು ಪರೀಶೀಲನೆ ನಡೆಸಿರುವ ನ್ಯಾಯಮೂರ್ತಿ ಹೆಚ್. ಬಿಲ್ಲಪ್ಪ ಅವರಿದ್ದ ಏಕಸದಸ್ಯಪೀಠ ಲೋಕಾಯುಕ್ತ ಪೊಲೀಸರು ಮತ್ತು ದೂರುದಾರ ಬಸವರಾಜು ಅವರಿಗೆ ನೋಟಿಸ್ ಜಾರಿಗೊಳಿಸಿದೆ. ಅಲ್ಲದೆ, ಆಕ್ಷೇಪಣೆ ಸಲ್ಲಿಸುವಂತೆ ಸೂಚನೆ ನೀಡಿ ವಿಚಾರಣೆಯನ್ನು ಮುಂದೂಡಿದೆ.
2010 ಮಾರ್ಚ್ 23 ರಂದು ಬಸವರಾಜು ಎಂಬುವರಿಂದ ಲಂಚ ಪಡೆಯುತ್ತಿದ್ದಾಗ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ವಿ.ಜೆ ಅಲ್ಫನ್ಸೋ ಅವರು ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದರು. ವಿಚಾರಣೆ ವೇಳೆ ನಾನು ಲೋಕೋಪಯೋಗಿ ಸಚಿವ ಮಹದೇವಪ್ಪ ಅವರ ಪುತ್ರ ಸುನಿಲ್ ಬೋಸ್ ಗೆ ಹಣ ನೀಡುವ ಉದ್ದೇಶದಿಂದ ಲಂಚದ ಹಣವನ್ನು ಪಡೆದುಕೊಂಡಿದ್ದೆ ಎಂದು ಹೇಳಿದ್ದರು. 3 ವರ್ಷಗಳ ಬಳಿ 2013ರಲ್ಲಿ ಆರೋಪಪಟ್ಟಿ ಸಲ್ಲಿಸಿದ್ದ ಲೋಕಾಯುಕ್ತ ಪೊಲೀಸರು ಅಲ್ಪನ್ಸೋ ಅವರನ್ನು ಅಪರಾಧಿಯನ್ನಾಗಿ ಮಾಡಿ, ಸುನೀಲ್ ಬೋಸ್ ಅವರಿಗೆ ಕ್ಲೀನ್ ಚಿಟ್ ನೀಡಿದ್ದರು.