ನೂತನ ಕಪ್ಪು ಹಣ ನಿಯಂತ್ರಣ ಕಾಯ್ದೆ : ನಿರ್ಮಲಾ ಸೀತಾರಾಮನ್‌

ಕಪ್ಪು ಹಣವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಹಲವು ಕಾರ್ಯಕ್ರಮಗಳನ್ನು ಕೈಗೆತ್ತಿಕೊಂಡಿದೆ. ಸುಪ್ರೀಂ ಕೋರ್ಟಿನ ನಿವೃತ್ತ...
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

ಮಂಗಳೂರು: ಕಪ್ಪು ಹಣವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಹಲವು ಕಾರ್ಯಕ್ರಮಗಳನ್ನು ಕೈಗೆತ್ತಿಕೊಂಡಿದೆ. ಸುಪ್ರೀಂ ಕೋರ್ಟಿನ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಲಾಗಿದೆ ಹಾಗೂ ಕಟ್ಟು ನಿಟ್ಟಿನ ದಂಡಗಳನ್ನು ವಿಧಿಸಲು ಅವಕಾಶವಿರುವ ನೂತನ ಕಪ್ಪು ಹಣ ನಿಯಂತ್ರಣ ಕಾಯ್ದೆಯನ್ನು ರೂಪಿಸಲಾಗಿದೆ ಎಂದು ಕೇಂದ್ರ ವಾಣಿಜ್ಯ ಖಾತೆ ರಾಜ್ಯ ಸಚಿವೆ ನಿರ್ಮಲಾ ಸೀತಾರಾಮನ್‌ ತಿಳಿಸಿದ್ದಾರೆ.

ಕೇಂದ್ರದ ಎನ್‌ಡಿಎ ಸರ್ಕಾರ 2 ವರ್ಷಗಳ ಆಡಳಿತಾವಧಿಯನ್ನು ಪೂರ್ತಿಗೊಳಿಸಿದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಏರ್ಪಡಿಸಿದ್ದ ವಿಕಾಸ ಪರ್ವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ವಿದೇಶಿ ಬ್ಯಾಂಕ್‌ಗಳಲ್ಲಿ ಇರಿಸಿದ ಕಪ್ಪು ಹಣ ತರಿಸುವುದು ಅಷ್ಟೊಂದು ಸುಲಭವಲ್ಲ. ವಿಶೇಷ ತನಿಖಾ ತಂಡದ ಹಲವಾರು ಶಿಫಾರಸುಗಳನ್ನು ಜಾರಿಗೊಳಿಸಲಾಗಿದೆ. ಮಾರಿಷಸ್‌ ತೆರಿಗೆ ಒಪ್ಪಂದದಲ್ಲಿ ದಶಕಗಳಿಂದ ಇದ್ದ ಲೋಪದೋಷಗಳನ್ನು ಯಶಸ್ವಿ ಮಾತುಕತೆಯ ಮೂಲಕ ಬಗೆಹರಿಸಲಾಗಿದೆ. 2 ಲಕ್ಷ ರೂಪಾಯಿಗಳಿಗಿಂತ ಹೆಚ್ಚಿನ ಮೊತ್ತದ ಎಲ್ಲ ವ್ಯವಹಾರಗಳಿಗೆ ಪಾನ್‌ ಕಾರ್ಡ್‌ ಕಡ್ಡಾಯಗೊಳಿಸಲಾಗಿದೆ. ಬೆಲೆ ಬಾಳುವ ಕಾರುಗಳಿಗೆ ಸ್ಥಳದಲ್ಲಿಯೇ ತೆರಿಗೆ ಸಂಗ್ರಹಿಸಲಾಗುತ್ತಿದೆ. ದೇಶೀಯ ಕಪ್ಪು ಹಣಕ್ಕೆ ಸಂಬಂಧಿಸಿ ಹೊಸ ಆದಾಯ ಘೋಷಣೆ ಯೋಜನೆ ಜಾರಿಗೆ ತರಲಾಗಿದೆ ಎಂದು ವಿವರಿಸಿದರು.

ಸುಧಾರಿತ ಅನುಷ್ಠಾನ ಕ್ರಮಗಳಿಂದಾಗಿ ತೆರಿಗೆ ಪಾವತಿ ಮಾಡದೆ ತಪ್ಪಿಸಿಕೊಳ್ಳಲು ಯತ್ನಿಸಿದ 50 ಸಾವಿರ ಕೋಟಿ ರೂಪಾಯಿ ಪರೋಕ್ಷ ತೆರಿಗೆ ಹಾಗೂ 21 ಸಾವಿರ ಕೋಟಿ ರೂಪಾಯಿ ಅಪ್ರಕಟಿತ ಆದಾಯವನ್ನು ಪತ್ತೆ ಹಚ್ಚಲು ಸಾಧ್ಯವಾಗಿದೆ. ಅಕ್ರಮವಾಗಿ ಸಾಗಿಸಲು ಯತ್ನಿಸಿದ 3 ಸಾವಿರದ 963 ಕೋಟಿ ರೂಪಾಯಿ ಮೌಲ್ಯದ ಸೊತ್ತುಗಳನ್ನು ಕಳೆದ ಎರಡು ವರ್ಷಗಳಲ್ಲಿ ವಶ ಪಡಿಸಿ ಕೊಳ್ಳಲಾಗಿದೆ. ಸಾವಿರದ 466 ಪ್ರಕರಣಗಳಲ್ಲಿ ಶಿಕ್ಷೆಯಾಗಿದೆ ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com