ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ(ಬಿಡಿಎ) ಆಯುಕ್ತ ಟಿ.ಶ್ಯಾಂ ಭಟ್ ಅವರನ್ನು ರಾಜ್ಯ ಸರ್ಕಾರ ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿಯನ್ನಾಗಿ ಮಂಗಳವಾರ ವರ್ಗಾವಣೆ ಮಾಡಿದ್ದು, ಆ ಸ್ಥಾನಕ್ಕೆ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿದ್ದ ರಾಜ್ ಕುಮಾರ್ ಖತ್ರಿ ಅವರನ್ನು ನೇಮಕ ಮಾಡಲಾಗಿದೆ.
ಈ ಹಿಂದೆ ರಾಜ್ಯ ಸರ್ಕಾರ ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ಅಧ್ಯಕ್ಷ ಸ್ಥಾನಕ್ಕೆ ಶ್ಯಾಂ ಭಟ್ ಅವರ ಹೆಸರನ್ನು ರಾಜ್ಯ ಸರ್ಕಾರ ಶಿಫಾರಸು ಮಾಡಿತ್ತು. ಆದರೆ ಅವರ ನೇಮಕಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಅವರ ಕೆಪಿಎಸ್ಸಿಗೆ ಶ್ಯಾಂ ಭಟ್ ಅವರ ಹೆಸರು ಶಿಫಾರಸು ಮಾಡಿದ್ದ ಕಡತವನ್ನು ರಾಜ್ಯಪಾಲ ವಜುಭಾಯಿ ವಾಲಾ ಅವರು ವಾಪಸ್ ಕಳುಹಿಸಿದ್ದಾರೆ.
ಈ ಮಧ್ಯ ಕೆಪಿಎಸ್ಸಿ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಅಂತಿಮ ತೀರ್ಪು ನೀಡಿರುವ ಹೈಕೋರ್ಟ್, ಕೆಪಿಎಸ್ಸಿ ಅಧ್ಯಕ್ಷರ ಹಾಗೂ ಸದಸ್ಯರ ನೇಮಕಕ್ಕೆ ಸಂಬಂಧಿಸಿದಂತೆ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಇದರಿಂದ ಶ್ಯಾಂ ಭಟ್ ಶಿಫಾರಸಿಗೆ ಕುತ್ತು ಬರುವ ಸಾಧ್ಯತೆ ಇದೆ.