ಬೆಂಗಳೂರು: ಕೇಂದ್ರ ಸರ್ಕಾರದ ಅಡಿಕೆ ಆಮದು ನೀತಿ ವಿರೋಧಿಸಿ ಇದೇ 27ರಂದು ರಾಜ್ಯದ 13 ಜಿಲ್ಲೆಗಳಲ್ಲಿ ಅಡಿಕೆ ಬೆಳೆಗಾರರು ಬಂದ್ ಆಚರಿಸಲಿದ್ದಾರೆ.
ಅಡಿಕೆ ಬೆಲೆ ನಿರಂತರ ಕುಸಿಯುತ್ತಿದ್ದು ಕೂಡಲೇ ಸರ್ಕಾರ ಪರಿಹಾರ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಬಂದ್ ಆಚರಿಸುತ್ತಿದ್ದೇವೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರುಸೇನೆ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ.
ಈ ಬಂದ್ ಗೆ ಸ್ಥಳೀಯ ಸಂಘಟನೆಗಳು ಬೆಂಬಲ ನೀಡಿವೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ದಾವಣಗೆರೆ, ಶಿವಮೊಗ್ಗ, ಹಾವೇರಿ, ಚಿಕ್ಕಮಗಳೂರು, ಹಾಸನ, ಬೆಂಗಳೂರು ಗ್ರಾಮಾಂತರ ಸೇರಿದಂತೆ 13 ಜಿಲ್ಲೆಗಳಲ್ಲಿ ಬಂದ್ ಗೆ ಕರೆನೀಡಲಾಗಿದೆ.
ವಿವಿಧ ಕಾರಣಗಳಿಂದ ಅಡಿಕೆ ಮತ್ತು ತೆಂಗು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಶ್ರೀಲಂಕಾ, ಮಲೇಷಿಯಾ ಸೇರಿದಂತೆ ನೆರೆ ರಾಷ್ಟ್ರಗಳಿಂದ ತೆಂಗು ಮತ್ತು ಅಡಕೆ ಆಮದು ಮಾಡಿಕೊಳ್ಳುತ್ತಿರುವುದರಿಂದ ನಮ್ಮ ದೇಶದ ಅಡಿಕೆಗೆ ಧಾರಣೆ ಇಲ್ಲವಾಗಿದೆ. ರಾಜ್ಯ ಸರ್ಕಾರ ಸಹ ನಿರ್ಲಕ್ಷ್ಯ ತಾಳಿದ್ದು ಪರಿಹಾರಕ್ಕೆ ಮುಂದಾಗುತ್ತಿಲ್ಲ ಎಂದು ಚಂದ್ರಶೇಖರ್ ಆರೋಪಿಸಿದ್ದಾರೆ.
Advertisement