ಬೆಂಗಳೂರು: ಬೆಂಗಳೂರಿನ ಬೆಳ್ಳಂದೂರು ಗೇಟ್ ಬಳಿ ಬುಧವಾರ ನಿರ್ಮಾಣ ಹಂತದ ಐದು ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿದ್ದು, ಅವಶೇಷಗಳಡಿ ಸಿಲುಕಿದ್ದ ವಾಚ್ ಮನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಮತ್ತು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಘಟನಾ ಸ್ಥಳಕ್ಕೆ ಐದು ಅಗ್ನಿ ಶಾಮಕ ದಳದ ವಾಹನಗಳು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿದೆ. ಈಗಗಾಲೇ 8 ವರ್ಷದ ಓರ್ವ ಬಾಲಕ ಸೇರಿದಂತೆ ನಾಲ್ವರನ್ನು ರಕ್ಷಿಸಲಾಗಿದ್ದು, ಇನ್ನೂ ನಾಲ್ವರು ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಪ್ರತ್ಯಕ್ಷದರ್ಶಿಗಳ ಪ್ರಕಾರ ಕಟ್ಟಡ ಕುಸಿಯುವುದಕ್ಕೂ ಮುನ್ನ ದೊಡ್ಡ ಸ್ಫೋಟದ ಶಬ್ದ ಕೇಳಿ ಬಂತು ಎಂದು ತಿಳಿದುಬಂದಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಕಟ್ಟಡದಲ್ಲಿ 20ಕ್ಕೂ ಅಧಿಕ ಕಾರ್ಮಿಕರು ಇದ್ದರು ಎಂದು ತಿಳಿದುಬಂದಿದೆ. ಪ್ರಸ್ತುತ ನಾಲ್ಕು ಮಂದಿಯನ್ನು ರಕ್ಷಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಗಾಯಾಳುಗಳನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಈ ಕಟ್ಟಡ ಕುಸಿತದಿಂದಾಗಿ ಪಕ್ಕದಲ್ಲೇ ಇದ್ದ ಕಟ್ಟಡಕ್ಕೂ ಕೂಡ ಹಾನಿಯಾಗಿದೆ. ಆದರೆ ಕಟ್ಟಡದ ಮಾಲೀಕತ್ವದ ಕುರಿತು ಈವರೆಗೂ ಯಾವುದೇ ಮಾಹಿತಿ ತಿಳಿದುಬಂದಿಲ್ಲವಾದರೂ, ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.