ಬೆಂಗಳೂರು: ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಕಡ್ಡಾಯಗೊಳಿಸುವಂತೆ ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿ ನೀಡಿದ್ದ ಆದೇಶದ ವಿರುದ್ಧ ಪ್ರತಿಭಟನೆ ನಡೆಸಿದ್ದ 13 ವಕೀಲರ ವಿರುದ್ಧ ಕರ್ನಾಟಕ ರಾಜ್ಯ ವಕೀಲರ ಸಂಘ (ಕರ್ನಾಟಕ ಸ್ಟೇಟ್ ಬಾರ್ ಕೌನ್ಸಿಲ್) ಶನಿವಾರ ಶಿಸ್ತುಕ್ರಮ ಕೈಗೊಂಡಿದೆ.
ಈ ಬಗ್ಗೆ ಕರ್ನಾಟಕ ರಾಜ್ಯ ಬಾರ್ ಕೌನ್ಸಿಲ್ ನ ಶಿಸ್ತು ಸಮಿತಿಯ ಮುಖ್ಯಸ್ಥ ಸಿ.ಆರ್. ಗೋಪಲಸ್ವಾಮಿ ಮತ್ತು ಸದಸ್ಯರಾದ ಆರ್. ಜಿ.ಹೆಗ್ಡೆ ಮತ್ತು ಅಪ್ಪಾಜಿಗೌಡ ಆದೇಶ ಹೊರಡಿಸಿದ್ದು, 13 ವಕೀಲರ ಪೈಕಿ 5 ವಕೀಲರ ವಜಾ ಹಾಗೂ 8 ವಕೀಲರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದೆ.
ತಮಿಳುನಾಡಿನಲ್ಲಿ ಹೆಲ್ಮೆಟ್ ಕಡ್ಡಾಯಗೊಳಿಸುವಂತೆ ಮದ್ರಾಸ್ ಹೈಕೋರ್ಟ್ ನ ನ್ಯಾಯಾಧೀಶರೊಬ್ಬರು ಆದೇಶ ಹೊರಡಿಸಿದ್ದರು. ಈ ಆದೇಶಕ್ಕೆ ತಮಿಳುನಾಡು ಹಾಗೂ ಪುದುಚೇರಿಯ ಕೆಲ ವಕೀಲರು ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ, ನ್ಯಾಯಾಲಯದ ಶಿಸ್ತನ್ನು ಉಲ್ಲಂಘನೆ ಮಾಡಿ ಆದೇಶದ ವಿರುದ್ಧ ಮಧುರೈನಲ್ಲಿ ರ್ಯಾಲಿ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಶಿಸ್ತು ಸಮಿತಿ ಈ ರೀತಿಯ ನಿರ್ಧಾರ ಕೈಗೊಂಡಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
Advertisement