ಬೆಂಗಳೂರು: 2018ರ ವಿಧಾನಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ ಮಾಡಿಕೊಂಡಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಈ ಹಿಂದೆ ಬಜೆಟ್ ನಲ್ಲಿ ಘೋಷಣೆ ಮಾಡಿದಂತೆ ರಾಜ್ಯದಲ್ಲಿ ನೂತನ 49 ತಾಲ್ಲೂಕು ರಚನೆಗೆ ಕ್ರಮ ಕೈಗೊಂಡಿದೆ.
ಸೋಮವಾರ ವಿಧಾನಸೌಧದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ 49 ಹೊಸ ತಾಲೂಕು ರಚನೆಗೆ ಅನುಮೋದನೆ ನೀಡಲಾಗಿದೆ. ಈ ಹಿಂದೆ ಬಜೆಟ್ ನಲ್ಲಿ ಘೋಷಣೆ ಮಾಡಿರುವ ದಾಂಡೇಲಿ, ಅಳ್ನಾವರ, ಬಬಲೇಶ್ವರ, ಕುಡಚಿ, ಬ್ರಹ್ಮಾವರ, ಕಾಪು, ಮೂಡಬಿದರೆ ಸೇರಿದಂತೆ 49 ಹೊಸ ತಾಲೂಕು ರಚನೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಈ ಕುರಿತು ಸಂಪುಟ ಸಭೆ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಸಚಿವ ಟಿ.ಬಿ. ಜಯಚಂದ್ರ ಅವರು, 49 ಹೊಸ ತಾಲೂಕುಗಳ ರಚನೆಗೆ ಒಪ್ಪಿಗೆ ನೀಡಲಾಗಿದ್ದು, ಹೊಸ ತಾಲೂಕುಗಳ ಗಡಿ ನಿರ್ಧಾರವಾಗದ ಹಿನ್ನೆಲೆಯಲ್ಲಿ ತಕ್ಷಣವೇ ಆದೇಶ ಹೊರಡಿಸುವುದಿಲ್ಲ. ಹೊಸ ತಾಲೂಕುಗಳಿಗೆ ಸೇರ್ಪಡೆಯಾಗುವ ಭೂ ಪ್ರದೇಶದ ಗಡಿ ನಿಗದಿ ಪಡಿಸಿ ಶೀಘ್ರವೇ ಸರ್ಕಾರಕ್ಕೆ ವರದಿ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಜಿಲ್ಲಾಧಿಕಾರಿಗಳ ವರದಿ ಬಂದ ನಂತರ ಸರ್ಕಾರ ಅಧಿಕೃತ ಆದೇಶ ಹೊರಡಿಸಲಿದೆ ಎಂದು ತಿಳಿಸಿದ್ದಾರೆ.
Advertisement