ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂಬರುವ ವಿಧಾನಸಭೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ವಿವಿಧ ಜಾತಿ ಮತ್ತು ಪಂಗಡದವರಿಗೆ ಭೂ ಭಾಗ್ಯ ಕರುಣಿಸಲು ಮುಂದಾಗಿದ್ದಾರೆ. ಈ ಸಂಬಂಧ 78 ಎಕರೆ ಭೂಮಿಯನ್ನು ನೀಡಲು ರಾಜ್ಯ ಸಚಿವ ಸಂಪುಟ ಅನುಮೋದಿಸಿದೆ. ನೆಲಮಂಗಲ ಬಳಿಯ ದಾಸನಪುರ ಹೋಬಳಿಯ ಮಾಚೋಹಳ್ಳಿ ಗ್ರಾಮದಲ್ಲಿ 58 ಎಕರೆ 20 ಗುಂಟೆ ಸರ್ಕಾರಿ ಜಾಗವನ್ನು ಜಾತಿ ಸಂಘಗಳೂ ಸೇರಿ 36 ವಿವಿಧ ಸಂಘ ಸಂಸ್ಥೆಗಳಿಗೆ ಮಂಜೂರು ಮಾಡಲು ಸಂಪುಟ ಅನುಮೋದನೆ ನೀಡಿದೆ.
ವೀರಶೈವ, ಒಕ್ಕಲಿಗ ಸೇರಿದಂತೆ ರಾಜ್ಯದಲ್ಲಿರುವ ವಿವಿಧ ಜಾತಿ, ಸಮುದಾಯಗಳಿಗೆ ಶೈಕ್ಷಣಿಕ ಹಾಗೂ ಇತರೆ ಉದ್ದೇಶಗಳಿಗೆ ಗುತ್ತಿಗೆ ಆಧಾರದಲ್ಲಿ ಜಮೀನು ಮಂಜೂರು ಮಾಡಲಾಗಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ. ಜಯಚಂದ್ರ ತಿಳಿಸಿದರು.
ಸೇವಾ ಸಿಂಧು: ಎಲ್ಲ ಸರ್ಕಾರಿ ಮತ್ತು ಅರೆ ಸರ್ಕಾರಿ ಸೇವೆಗಳನ್ನು ಕೇಂದ್ರೀಯ ಅಂತರ್ಜಾಲದಲ್ಲಿ ಲಭ್ಯವಾಗುವಂತೆ ಮಾಡುವ ‘ಸೇವಾ ಸಿಂಧು’ ಯೋಜನೆಗೆ ಸಂಪುಟ ಒಪ್ಪಿಗೆ ನೀಡಿದೆ. 19 ಇಲಾಖೆಗಳ 326 ಸೇವೆಗಳು ಈ ಯೋಜನೆಯಡಿಯಲ್ಲಿ ಬರಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.