ಬೆಂಗಳೂರು: ತಮ್ಮ ಸಹೋದ್ಯೋಗಿ ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ ಆರೋಪದ ಮೇಲೆ ಜೈಲು ಪಾಲಾಗಿರುವ ಹಿರಿಯ ಪತ್ರಕರ್ತ ಹಾಗೂ ಹಾಯ್ ಬೆಂಗಳೂರು ಪತ್ರಿಕೆ ಸಂಪಾದಕ ರವಿ ಬೆಳಗೆರೆ ಅವರಿಗೆ ಸೆಷನ್ಸ್ ಕೋರ್ಟ್ ಬುಧವಾರ ಷರತ್ತು ಬದ್ದ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಅನಾರೋಗ್ಯದ ಹಿನ್ನೆಲೆಯಲ್ಲಿ ರವಿ ಬೆಳಗೆರೆ ಅವರಿಗೆ ಡಿಸೆಂಬರ್ 16ರ ವರೆಗೆ ನ್ಯಾಯಾಲಯ ಮಧ್ಯಂತರ ಜಾಮೀನು ನೀಡಿದೆ. ಅಲ್ಲದೆ ತನಿಖೆಗೆ ಸಹಕರಿಸುವಂತೆ ನ್ಯಾಯಾಲಯ ರವಿ ಬೆಳಗೆರೆಗೆ ಸೂಚಿಸಿದೆ.
ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ ಆರೋಪದ ಸಿಸಿಬಿ ಪೊಲೀಸರು ಕಳೆದ ಶನಿವಾರ ರವಿ ಬೆಳಗೆರೆ ಅವರನ್ನು ಬಂಧಿಸಿದ್ದು, ಆರೋಪಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನ ಒಪ್ಪಿಸಲಾಗಿತ್ತು. ಬಳಿಕ ರವಿ ಬೆಳಗೆರೆಯನ್ನು ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರಿಸಲಾಗಿತ್ತು.