ಬೆಂಗಳೂರು: "ಬೆಂಗಳೂರಿನಲ್ಲಿ ಪ್ರತಿನಿತ್ಯ 144 ಕೋಟಿ ಲೀಟರ್ ಕೊಳಚೆ ನೀರು ಉತ್ಪತ್ತಿಯಾಗುತ್ತಿದೆ. ನಗರದ ವಿವಿಧೆಡೆ ಕೊಳಚೆ ನೀರು ಶುದ್ಧೀಕರಣ ಘಟಕಗಳನ್ನು ಸ್ಥಾಪಿಸಲಾಗುತ್ತಿದ್ದು 2020ರ ವೇಳೆಗೆ ಪೂರ್ಣ ಪ್ರಮಾಣದ ಕೊಳಚೆ ನೀರನ್ನು ಶುದ್ಧೀಕರಿಸಲು ಸಾಧ್ಯವಾಗುತ್ತದೆ" ಬೆಂಗಳೂರು ಅಭಿವೃದ್ದಿ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ನಗರದ ಸೀಗೆಹಳ್ಳಿ ಮುಖ್ಯರಸ್ತೆಯ ಎಲೆ ಮಲ್ಲಪ್ಪ ಚೆಟ್ಟಿ ಕೆರೆ ಬಳಿ ನಿರ್ಮಿಸಿರುವ 1.5 ಕೋಟಿ ಲೀಟರ್ ಸಾಮರ್ಥ್ಯದ ಕೊಳಚೆ ನೀರು ಶುದ್ಧೀಕರಣ ಘಟಕವನ್ನು ಉದ್ಘಾಟಿಸಿ ಅವರು ಮಾತನಾಡಿದರು
"ನಗರದ ಕೊಳಚೆ ನೀರನ್ನು ಶುದ್ಧೀಕರಿಸಿ ಬರಪೀಡಿತ ಜಿಲ್ಲೆಗಳಾದ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಕೆರೆಗಳಿಗೆ ಹರಿಸಲು ಉದ್ದೇಶಿಸಲಾಗಿದ್ದು ಇದಕ್ಕಾಗಿ ಪೈಪ್ಲೈನ್ ಅಳವಡಿಕೆ ಕಾರ್ಯ ಸಾಗಿದೆ. ಕೆರೆ ಸಂರಕ್ಷಣೆಗೆ ನಮ್ಮ ಸರ್ಕಾರ ಬದ್ದವಾಗಿದೆ" ಜಾರ್ಜ್ ಹೇಳಿದ್ದಾರೆ.
ಜಪಾನ್ನ ಅಂತರರಾಷ್ಟ್ರೀಯ ಸಹಕಾರ ಸಂಸ್ಥೆ ಜೈಕಾದ ನೆರವಿನೊಡನೆ 67 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಎಸ್ಟಿಪಿ ಕೆ.ಆರ್.ಪುರ, ದೇವಸಂದ್ರ ಇದೇ ಸುತ್ತಲಿನ ಪ್ರದೇಶದಿಂದ ಎಲೆ ಮಲ್ಲಪ್ಪ ಚೆಟ್ಟಿ ಕೆರೆಗೆ ಹರಿದು ಬರುವ ಕೊಳಚೆ ನೀರನ್ನು ಘಟಕದಲ್ಲಿ ಶುದ್ಧೀಕರಿಸಲಾಗುತ್ತದೆ.