ಹುಬ್ಬಳ್ಳಿ-ಧಾರವಾಡದಲ್ಲಿ ಬಂದ್ ಸಂಪೂರ್ಣ ಯಶಸ್ವಿ
ಮಹದಾಯಿ ನದಿ ನೀರಿಗಾಗಿ ಆಗ್ರಹಿಸಿ ರೈತ ಪರ ಸಂಘಟನೆಗಳು ಕರೆ ನೀಡಿರುವ ಉತ್ತರ ಕರ್ನಾಟಕ ಬಂದ್ ಮಲಪ್ರಭ ಪ್ರಾಂತ್ಯದಲ್ಲಿ ಸಂಪೂರ್ಣ ಯಶಸ್ವಿಯಾಗಿದ್ದು, ಹುಬ್ಬಳ್ಳಿ, ಧಾರವಾಡದಲ್ಲಿ ಬಸ್ ಸಂಚಾರ ಸಂಪೂರ್ಣ ಅಸ್ತವ್ಯಸ್ಥವಾಗಿದೆ. ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ ರೈತರ ಪ್ರತಿಭಟನೆ ಮುಂದುವರೆದಿದ್ದು, ಧಾರವಾಡದಲ್ಲೂ ಹಲವು ರೈತರಪರ ಸಂಘಟನೆಗಳು ಹಾಗೂ ಕನ್ನಡಪರ ಸಂಘಟನೆಗಳು ಬಂದ್ ಗೆ ಕೈ ಜೋಡಿಸಿವೆ. ಅವಳಿ ನಗರದಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿದ್ದು, ಹಲವೆಡೆ ಪ್ರತಿಭಟನಾ ನಿರತರು ಟೈರ್ ಗಳಿಗೆ ಬೆಂಕಿ ಹಚ್ಚಿದ್ದ ಪ್ರಕರಣಗಳು ದಾಖಲಾಗಿವೆ. ಇನ್ನು ಧಾರವಾಡದಲ್ಲಿ 9 ಮಂದಿ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಂತೆಯೇ ಹುಬ್ಬಳ್ಳಿಯಲ್ಲಿ ರೈಲ್ ರೋಕೋ ಚಳುವಳಿ ನಡೆಸಿದ ಸುಮಾರು 10ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಾಜಿ ಸಿಎಂ ಬಿಎಸ್ ವೈ ಅಣುಕು ಶವಯಾತ್ರೆ
ಏತನ್ಮಧ್ಯೆ ಪ್ರತಿಭಟನಾನಿರತರು ಮಾಜಿ ಸಿಎಂ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರ ವಿರುದ್ಥ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ಅವರ ಅಣುಕು ಶವಯಾತ್ರೆ ಕೂಡ ನಡೆಸಿದರು. ಈ ಹಿಂದೆ ಯಡಿಯೂರಪ್ಪ ಅವರು ಶತಾಯಗತಾಯ ಮಹದಾಯಿ ನದಿ ವಿವಾದ ಪರಿಹರಿಸಿ ನೀರು ತರುವುದಾಗಿ ಘೋಷಣೆ ಮಾಡಿದ್ದರು. ಆದರೆ ಅವರು ಮಾತು ಉಳಿಸಿಕೊಳ್ಳಲಿಲ್ಲ ಎಂದು ರೈತರು ಹಿಡಿಶಾಪ ಹಾಕಿದರು.