ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಕಮ್ಮನಹಳ್ಳಿ ಲೈಂಗಿಕ ದೌರ್ಜನ್ಯ ಪ್ರಕರಣ: ಸಂತ್ರಸ್ತೆ ತನಿಖೆಗೆ ಸಹಕರಿಸುತ್ತಿಲ್ಲ- ಪೊಲೀಸರು

ಹೊಸ ವರ್ಷಾಚರಣೆ ದಿನದಂದು ಕಮ್ಮನಹಳ್ಳಿಯಲ್ಲಿ ಯುವತಿಯೊಬ್ಬಳ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ತನಿಖೆಗೆ ಸಹಕರಿಸುತ್ತಿಲ್ಲ ಎಂದು ನಗರ ಪೊಲೀಸರು ಶನಿವಾರ ಹೇಳಿದ್ದಾರೆ...

ಬೆಂಗಳೂರು: ಹೊಸ ವರ್ಷಾಚರಣೆ ದಿನದಂದು ಕಮ್ಮನಹಳ್ಳಿಯಲ್ಲಿ ಯುವತಿಯೊಬ್ಬಳ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ತನಿಖೆಗೆ ಸಹಕರಿಸುತ್ತಿಲ್ಲ ಎಂದು ನಗರ ಪೊಲೀಸರು ಶನಿವಾರ ಹೇಳಿದ್ದಾರೆ.

ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಸಾಕಷ್ಟು ಶ್ರಮ ಪಡಲಾಗುತ್ತಿದೆ. ಪ್ರಕರಣ ಸಂಬಂಧ ಈ ವರೆಗೂ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಶೀಘ್ರದಲ್ಲೇ ಮತ್ತೊಬ್ಬ ಆರೋಪಿ ಬಂಧಿಸುವ ವಿಶ್ವಾಸವಿದೆ. ಆದರೆ, ಪ್ರಕರಣದಲ್ಲಿ ದೌರ್ಜನ್ಯಕ್ಕೊಳಗಾದ ಯುವತಿಯೇ ತನಿಖೆಗೆ ಸಹಕಾರ ನೀಡುತ್ತಿಲ್ಲ. ಆಕೆ ಮನವೊಲಿಸುವುದಕ್ಕೆ ಸಾಕಷ್ಟು ಯತ್ನಗಳನ್ನು ಮಾಡಲಾಗುತ್ತಿದೆ ಪೊಲೀಸರು ಹೇಳಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.

ಯುವತಿಯ ಆತ್ಮವಿಶ್ವಾಸ ಹೆಚ್ಚಿಸಲು ಮಹಿಳಾ ಸಂಘಟನೆಗಳು, ಸಾರ್ವಜನಿಕರು ಹಾಗೂ ರಾಜ್ಯ ಮಹಿಳಾ ಆಯೋಗಗಳು ಮುಂದೆ ಬರಬೇಕಿದೆ. ನಮ್ಮಿಂದ ಸಾಧ್ಯವಾದಷ್ಟು ಪ್ರಯತ್ನಗಳನ್ನು ನಾವು ಮಾಡುತ್ತಿದ್ದೇವೆ. ಯುವತಿ ವಿದ್ಯಾರ್ಥಿಯಾಗಿದ್ದು, ತನ್ನ ಮುಂದಿನ ವಿದ್ಯಾಭ್ಯಾಸದ ಕಡೆ ಚಿಂತಿಸಿ ತನಿಖೆಗೆ ಸಹಕರಿಸಲು ನಿರಾಕರಿಸುತ್ತಿದ್ದಾಳೆ ಎಂದು ಹೇಳಿಕೊಂಡಿದ್ದಾರೆ.

ಪ್ರಕರಣ ಸಂಬಂಧ ಮತ್ತೊಬ್ಬ ಆರೋಪಿ ಪಪ್ಪಿ ಎಂಬಾತ ತಲೆಮರೆಸಿಕೊಂಡಿದ್ದಾನೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ತನ್ನ ಮನೆಯಲ್ಲಿಯೇ ಫೋನ್ ನ್ನು ಇಟ್ಟಿರುವ ಆತ, ತಲೆಮರೆಸಿಕೊಂಡಿದ್ದಾನೆ. ಶೀಘ್ರದಲ್ಲೇ ಆತನನ್ನು ಬಂಧನಕ್ಕೊಳಪಡಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯ ಮಹಿಳಾ ಆಯೋಗದ ಮುಖ್ಯಸ್ಥ ನಾಗಲಕ್ಷ್ಮಿ ಭಾಯಿ ಮಾತನಾಡಿ, ಪೊಲೀಸ್ ಠಾಣೆ ಭೇಟಿ ನೀಡಿದ್ದೆ. ತನಿಖೆ ಸಂಬಂಧ ಮಾಹಿತಿಗಳನ್ನು ಪಡೆದುಕೊಂಡಿದ್ದೇನೆ. ಆದರೆ, ಸಂತ್ರಸ್ತೆಯನ್ನು ಈವರೆಗೂ ಭೇಟಿಯಾಗಿಲ್ಲ. ಶೀಘ್ರದಲ್ಲೇ ಮತ್ತೊಬ್ಬ ಆರೋಪಿಯನ್ನು ಬಂಧಿಸುವ ವಿಶ್ವಾಸವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಪ್ರಕರಣ ಸಂಬಂಧ ಸಿಸಿಟಿವಿ ವಿಡಿಯೋವನ್ನು ಪೊಲೀಸರಿಗೆ ನೀಡಿದ್ದ ಪ್ರಶಾಂತ್ ಫ್ರಾನ್ಸಿಸ್ ಅವರ ನಿವಾಸಕ್ಕೂ ಭೇಟಿ ನೀಡಿದ್ದೆ. ಆವರಿಗೆ ಅಭಿನಂದನೆಗಳನ್ನು ಹೇಳಿದ್ದೇನೆ. ಸಂತ್ರಸ್ತ ಯುವತಿಗೆ ಆತ್ಮವಿಶ್ವಾಸ ಹೆಚ್ಚಿಸುವ ಕೆಲಸವನ್ನು ಶೀಘ್ರದಲ್ಲೇ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com