ಹುಬ್ಬಳ್ಳಿ: ಲೋಕಾಯುಕ್ತಕ್ಕೆ ನ್ಯಾ. ವಿಶ್ವನಾಥ ಶೆಟ್ಟಿ ಅವರನ್ನು ನೇಮಕ ಮಾಡಲು ಸರ್ಕಾರ ಶಿಫಾರಸು ಮಾಡಿರುವ ಹಿನ್ನೆಲೆಯಲ್ಲಿ ಸಮಾಜ ಪರಿವರ್ತನಾ ಸಮುದಾಯ ಮುಖ್ಯಸ್ಥ ಎಸ್ ಆರ್ ಹಿರೇಮಠ್ ವಿರೋಧ ವ್ಯಕ್ತ ಪಡಿಸಿದ್ದಾರೆ.
ಸರ್ಕಾರ ಲೋಕಾಯುಕ್ತ ಸಂಸ್ಥೆಯ ಪಾವಿತ್ರ್ಯತೆಯನ್ನು ಹಾಳು ಮಾಡಲು ಸರ್ಕಾರ ತನ್ನೆಲ್ಲಾ ಪ್ರಯತ್ನವನ್ನು ಮಾಡುತ್ತಿದೆ. ವಿಶ್ವನಾಥ ಶೆಟ್ಟಿ ವಿರುದ್ಧ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಸಂಗ್ರಹಿಸಿದ್ದು, ಬುಧವಾರ ರಾಜ್ಯಪಾಲ ವಜುಬಾಯಿ ವಾಲಾ ಅವರಿಗೆ ಸಲ್ಲಿಸುವುದಾಗಿ ಹೀರೆಮಠ್ ಹೇಳಿದ್ದಾರೆ.
ಹಿಂದಿನ ಲೋಕಾಯುಕ್ತ ನ್ಯಾಯಮೂರ್ತಿ ನೇಮಕವಾಗಿದ್ದ ಶಿವರಾಜ್ ಪಾಟೀಲ್ ಅವರು ಎದುರಿಸುತ್ತಿದ್ದಂತ ಆರೋಪಗಳನ್ನು ವಿಶ್ವನಾಥ ಶೆಟ್ಟಿ ಕೂಡ ಎದುರಿಸುತ್ತಿದ್ದಾರೆ. ಹೀಗಾಗಿ ಸರ್ಕಾರ ಮಾಡಿರುವ ಶಿಫಾರಸಿಗೆ ಗ್ರೀನ್ ಸಿಗ್ನಲ್ ನೀಡಬಾರದೆಂಗದು ಮನವಿ ಮಾಡುವುದಾಗಿ ತಿಳಿಸಿದ್ದಾರೆ.
ನ್ಯಾ. ವಿಶ್ವನಾಥ ಶೆಟ್ಟಿ ಅವರು ಬಿಡಿಎವತಿಯಿಂದ ಬೆಂಗಳೂರಿನ ಆರ್ ಟಿ ನಗರದಲ್ಲಿ ನಿವೇಶನ ಹೊಂದಿದ್ದಾರೆ. ಬೆಂಗಳೂರಿನ ನ್ಯಾಯಾಂಗ ಬಡಾವಣೆಯಲ್ಲಿ ಕೂಡ ನಿವೇಶನ ಪಡೆದಿದ್ದಾರೆ.
ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಾಮಮೋಹನ್ ರೆಡ್ಡಿ ಅವರ ವೀಕ್ಷಣೆಯಂತೆ ಸಾಂವಿಧಾನಿಕ ಸಂಸ್ಥೆಗಳ ಹುದ್ದೆಗಳನ್ನು ಹೊಂದಿರುವವರು, ನ್ಯಾಯಾಂಗ ಬಡಾವಣೆಯಲ್ಲಿ ನಿವೇಶನ ಹೊಂದುವಂತಿಲ್ಲ. ಆದರೆ ವಿಶ್ವನಾಥ ಶೆಟ್ಟಿ ನಿವೇಶನ ಹೊಂದಿದ್ದಾರೆ. ಹೀಗಿದ್ದರೂ ವಿಶ್ವನಾಥ ಶೆಟ್ಟಿ ಅವರು ಇಂಧನ ಸಚಿವ ಡಿ.ಕೆ ಶಿವಕುಮಾರ್ ಅವರ ಆಪ್ತರಾಗಿದ್ದಾರೆ. ಹೀಗಾಗಿ ಲೋಕಾಯುಕ್ತಕ್ಕೆ ವಿಶ್ವನಾಥ ಶೆಟ್ಟಿ ಅವರ ಹೆಸರನ್ನು ಶಿಫಾರಸು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ .
Advertisement