ಸಾಂದರ್ಭಿಕ ಚಿತ್ರ
ರಾಜ್ಯ
ವೀರಶೈವ– ಲಿಂಗಾಯತ ಪ್ರತ್ಯೇಕ ಧರ್ಮ ಘೋಷಣೆಗೆ ರಾಜ್ಯ ಸರ್ಕಾರದ ಒಲವು
ನಾಡ ಧ್ವಜಕ್ಕಾಗಿ ಬೇಡಿಕೆಯಿಟ್ಟಿದ್ದ ರಾಜ್ಯ ಸರ್ಕಾರ ಈಗ ವೀರಶೈವ-ಲಿಂಗಾಯತ ಸಮುದಾಯವನ್ನು ಪ್ರತ್ಯೇಕ ಧರ್ಮವೆಂದು ಘೋಷಿಸಬೇಕೆಂಬ ...
ಬೆಂಗಳೂರು: ಪ್ರತ್ಯೇಕ ನಾಡ ಧ್ವಜಕ್ಕಾಗಿ ಬೇಡಿಕೆಯಿಟ್ಟಿದ್ದ ರಾಜ್ಯ ಸರ್ಕಾರ ಈಗ ವೀರಶೈವ-ಲಿಂಗಾಯತ ಸಮುದಾಯವನ್ನು ಪ್ರತ್ಯೇಕ ಧರ್ಮವೆಂದು ಘೋಷಿಸಬೇಕೆಂಬ ಒತ್ತಾಯಕ್ಕೆ ಬೆಂಬಲ ನೀಡುತ್ತಿದೆ.
ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆ ಸರ್ಕಾರ ಕೈಗೊಳ್ಳುತ್ತಿರುವ ಈ ನಿರ್ಧಾರ ಜನತೆಯ ಮೇಲೆ ಸಾಮಾಜಿಕ ಹಾಗೂ ರಾಜಕೀಯವಾಗಿ ಪರಿಣಾಮ ಬೀರಲಿದೆ, ಸಮುದಾಯವನ್ನು ಪ್ರತ್ಯೇಕ ಧರ್ಮವೆಂದು ಘೋಷಿಸುವ ಸಂಬಂಧ ಅಭಿಪ್ರಾಯ ಸಂಗ್ರಹಿಸಲು ಈ ಸಮುದಾಯದ ಐವರು ಸಚಿವರು ಮುಂದಿನ ತಿಂಗಳು ರಾಜ್ಯದಾದ್ಯಂತ ಪ್ರವಾಸ ಮಾಡಲಿದ್ದಾರೆ.
ಸಚಿವರಾದ ಶರಣಪ್ರಕಾಶ ಪಾಟೀಲ, ಎಸ್.ಎಸ್. ಮಲ್ಲಿಕಾರ್ಜುನ, ಈಶ್ವರ ಖಂಡ್ರೆ, ವಿನಯ ಕುಲಕರ್ಣಿ ಮತ್ತು ಬಸವರಾಜ ರಾಯರೆಡ್ಡಿ ರಾಜ್ಯಾದ್ಯಂತ ಪ್ರವಾಸ ಮಾಡಿ ವಿವಿಧ ಭಾಗಗಳ ಮಠಾಧೀಶರು ಹಾಗೂ ಸಮಾಜದ ಮುಖಂಡರನ್ನು ಭೇಟಿ ಮಾಡಿ ಅವರ ಅಭಿಪ್ರಾಯ ಸಂಗ್ರಹಿಸಲಿದ್ದಾರೆ.
ಸಾರ್ವಜನಿಕರ ಮಠಾಧೀಶರ ಅಭಿಪ್ರಾಯ ಸಂಗ್ರಹಿಸಿ ಸಿಎಂ ಸಿದ್ದರಾಮಯ್ಯ ಅವರಿಗೆ ಈ ತಂಡ ಮೆಮೊರಂಡಮ್ ಸಲ್ಲಿಸಲಿದೆ. ವೀರಶೈವ ಮತ್ತು ಲಿಂಗಾಯತ ಎರಡೂ ಒಂದೇ ಆಗಿದ್ದು, ಪ್ರತ್ಯೇಕ ಧರ್ಮ ಎಂದು ಘೋಷಿಸುವಂತೆ ಮುಖ್ಯಮಂತ್ರಿಗಳ ಮೇಲೆ ವೀರಶೈವ ಮಹಾಸಭಾದ ಮುಖಂಡರು ಒತ್ತಾಯಿಸಿದ್ದಾರೆ. ಮುಖ್ಯಮಂತ್ರಿ ಅವರಾಗಿಯೇ ಈ ಮಾತನ್ನು ಎಲ್ಲೂ ಹೇಳಿಲ್ಲ. ಇದು ಸರ್ಕಾರದ ಅಧಿಕೃತ ನಿರ್ಧಾರವಲ್ಲ, ಜಾತಿ, ಧರ್ಮದ ಹೆಸರಿನಲ್ಲಿ ಮತ ರಾಜಕೀಯ ಮಾಡಬೇಕಾದ ಅವಶ್ಯಕತೆಯೂ ಸರ್ಕಾರಕ್ಕಿಲ್ಲ ಎಂದು ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ