ಬೆಂಗಳೂರು: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವ ವಿದ್ಯಾನಿಲಯವನ್ನು ಪ್ರಸಕ್ತ ಶೈಕ್ಷಣಿಕ ವರ್ಷದ ಮಧ್ಯಭಾಗದಲ್ಲಿ ರಾಮನಗರಕ್ಕೆ ಸ್ಥಳಾಂತರ ಮಾಡಲು ನಿರ್ಧರಿಸಲಾಗಿದೆ. ಆದರೆ ಇದಕ್ಕೆ ಇನ್ನೂ ರಾಜ್ಯಪಾಲರ ಅನುಮತಿ ಪಡೆದಿಲ್ಲ.
ವಿವಿಯ ಸಿಂಡಿಕೇಟ್ ಹಾಗೂ ಸೆನೆಟ್ ಸದಸ್ಯರಿಗೆ ಭಾನುವಾರ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಅಧಿಕೃತ ಆಹ್ವಾನ ನೀಡಲಾಗಿದೆ.
ಈ ಸಂಬಂಧ ಪ್ರತಿಕ್ರಿಯಿಸಿರುವ ವಿವಿಯ ರಿಜಿಸ್ಟ್ರಾರ್ ನೂರ್ ಮನ್ಸೂರ್, ನಮಗೆ ರಾಜಭವನದಿಂದ ಇನ್ನೂ ಅಧಿಕೃತ ಸಂಹವನ ನಡೆದಿಲ್ಲ, ವಿವಿ ಉಪ ಕಪಲಪತಿಗಳ ನಿರ್ದೇಶನದಂತೆ ಕೆಲಸ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಕುಲಪತಿ ಹಾಗೂ ರಾಜ್ಯಪಾಲರ ಜೊತೆ ಈ ಸಂಬಂಧ ಚರ್ಚಿಸಿದ್ದು, ವಿವಿ ಸ್ಥಳಾಂತರ ಪ್ರಕ್ರಿಯೆ ಆರಂಭಿಸುವಂತೆ ಉಪ ಕುಲಪತಿ ಡಾ.ಕೆ.ಎಸ್ ರವೀಂದ್ರನಾಥ್ ಸೂಚಿಸಿದ್ದಾರೆ ಎಂದು ಮನ್ಸೂರ್ ಹೇಳಿದ್ದಾರೆ.
ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬೆಂಗಳೂರಿನಲ್ಲಿರುವ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯನ್ನು ರಾಮನಗರಕ್ಕೆ ಸ್ಥಳಾಂತರಗೊಳಿಸದಂತೆ ರಾಜ್ಯಪಾಲ ವಜುಬಾಯಿ ವಾಲಾ ಈ ಹಿಂದೆ ಅಧಿಕೃತವಾಗಿ ತಿಳಿಸಿದ್ದರು.
ಶುಕ್ರವಾರ ಸಂಜೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಮತ್ತು ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ ಶಿವಕುಮಾರ್ ರಾಜಭವನಕ್ಕೆ ಭೇಟಿ ನೀಡಿ ರಾಜ್ಯಪಾಲರ ಜೊತೆ ಚರ್ಚಿಸಿ ಅವರ ಮನವೊಲಿಸಲು ಪ್ರಯತ್ನಿಸಿದ್ದಾರೆ. ಆದರೆ ಇದುವರೆಗೂ ವಿವಿ ಸ್ಥಳಾಂತರಕ್ಕೆ ರಾಜ್ಯಪಾಲರು ಅನುಮತಿ ನೀಡಿಲ್ಲ ಎಂದು ಹೇಳಲಾಗುತ್ತಿದೆ.
Advertisement