ಬೆಂಗಳೂರು: ರಾಜ್ಯದ ಹಲವು ಕಡೆ ಮಂಗಳವಾರ ಗುಡುಗು-ಸಿಡಿಲು ಸಹಿತ ಭಾರಿ ಮಳೆಯಾಗಿದ್ದು, ಮೂರು ಪ್ರತ್ಯೇಕ ಘಟನೆಗಳಲ್ಲಿ ಸಿಡಿಲು ಬಡಿದು ಓರ್ವ ಉಪನ್ಯಾಸಕ ಸೇರಿದಂತೆ ಆರು ಮಂದಿ ಮೃತಪಟ್ಟಿದ್ದಾರೆ.
ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ವಾಣಿ ವಿಲಾಸ ಸಾಗರದ ಹಿನ್ನೀರಿನಲ್ಲಿ ಈಜಲು ತೆರಳಿದ್ದ ವೇಳೆ ಸಿಡಿಲು ಬಿಡಿದು ಉಪನ್ಯಾಸಕ ಮಲ್ಲೇಶ್ ನಾಯ್ಕ್, ಹರೀಶ್ ನಾಯಕ್ ಹಾಗೂ ಛಾಯಾಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಹಾರನಕಣಿವೆ ರಂಗನಾಥಸ್ವಾಮಿ ದೇವಸ್ಥಾನದ ಬಳಿ ಈ ದುರಂತ ಸಂಭವಿಸಿದ್ದು, ಮೃತರು ಕುರುಬರಹಳ್ಳಿ ತಾಂಡಾದ ನಿವಾಸಿಗಳು ಎನ್ನಲಾಗಿದೆ. ಸ್ಥಳಕ್ಕೆ ಹಿರಿಯೂರು ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬಾಂಡ್ರಾವಿ ಗ್ರಾಮದ ಕುರಿಗಾಹಿ ಜಂಬಕ್ಕ(35) ಸಿಡಿಲು ಬಡಿದು ಮೃತಪಟ್ಟಿದ್ದಾರೆ.
ಇನ್ನು ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಮಾಕೋಡಶೆಟ್ಟಿಹಳ್ಳಿಯಲ್ಲಿ ಸಿಡಿಲು ಬಡಿದು ತಂದೆ, ಮಗ ಮೃತಪಟ್ಟಿದ್ದಾರೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ತಂದೆ ಬೀರೇಗೌಡ ಹಾಗೂ ಮಗ ಶಿವಕುಮಾರ್ ಮೃತ ದುರ್ದೈವಿಗಳಾಗಿದ್ದಾರೆ. ಈ ಸಂಬಂಧ ಪಿರಿಯಾಣಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.