ಬೆಂಗಳೂರು: ರಾಜ್ಯ ಸರ್ಕಾರ ಕೆಂಪೇ ಗೌಡ ದಿನವನ್ನು ಜೂನ್ 27ರಂದು ಆಚರಿಸಲಿದೆ ಎಂದು ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಅವರು ನಾಡಪ್ರಭು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಮುಖ್ಯಸ್ಥರಾಗಿದ್ದು ನಿನ್ನೆ ಪ್ರಾಧಿಕಾರದ ಮೊದಲ ಸಭೆ ನಡೆಸಲಾಯಿತು.
ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಸಚಿವ ಡಿ.ಕೆ.ಶಿವಕುಮಾರ್, ಮೆಯೊ ಹಾಲ್ ನಲ್ಲಿ ಕೆಂಪೇ ಗೌಡ ಸಂಗ್ರಹಾಲಯದ ಪಕ್ಕದಲ್ಲಿ ಪ್ರಾಧಿಕಾರದ ಕಚೇರಿ ಸ್ಥಾಪಿಸಲಾಗುವುದು. ತಜ್ಞರ ಅಭಿಪ್ರಾಯ ಪಡೆದು ಜೂನ್ 27ರಂದು ಆಚರಿಸಲು ನಿರ್ಧರಿಸಿದ್ದೇವೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯಕ್ರಮ ನಡೆಸಲಿದೆ ಎಂದು ಹೇಳಿದರು.
ಮಾಗಡಿ ತಾಲ್ಲೂಕಿನ ಕೆಂಪಾಪುರ ಗ್ರಾಮದಲ್ಲಿ ಕೆಲ ವರ್ಷಗಳ ಹಿಂದೆ ಕಾಣಿಸಿಕೊಂಡ ಕೆಂಪೇಗೌಡ ಸ್ಮಾರಕವನ್ನು ರಾಜ್ಯ ಸರ್ಕಾರ ಅಭಿವೃದ್ಧಿಪಡಿಸಲಿದೆ. ಕೆಂಪೇಗೌಡ ಅಧ್ಯಯನ ಕೇಂದ್ರವನ್ನು ಸ್ಥಾಪಿಸಲು ನಾವು ಯೋಜನೆ ರೂಪಿಸಿದ್ದೇವೆ ಎಂದರು.