ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನ ಝಳಕಿಯಲ್ಲಿ 15.2 ಸೆಂ.ಮೀ, ಚಡಚಣ ಪಟ್ಟಣದಲ್ಲಿ 12.7 ಸೆಂ.ಮೀ. ಮಳೆ ದಾಖಲಾಗಿದೆ. ಎಂಟು ವರ್ಷಗಳ ಬಳಿಕ ಚಡಚಣದ ಬೋರಿಹಳ್ಳ ಮೈದುಂಬಿ ಹರಿಯುತ್ತಿದೆ. ಬರಡೋಲ ಗ್ರಾಮದಲ್ಲಿ 27 ಮನೆಗಳಿಗೆ ಹಾನಿಯಾಗಿದೆ ಎಂದು ತಿಳಿದುಬಂದಿದೆ. ಜಿಗಜಿಣಗಿಯಲ್ಲೂ ಮನೆಗಳಿಗೆ ಹಾನಿಯಾಗಿದ್ದು, ಬಳ್ಳಾರಿ ಜಿಲ್ಲೆಯ ಕುರುಗೋಡಿನಲ್ಲಿ ಮನೆ ಗೋಡೆ ಕುಸಿದಿದೆ. ಕುರುಗೋಡು ಪಟ್ಟಣದಲ್ಲಿ 3.6 ಸೆಂ.ಮೀ ಮಳೆ ದಾಖಲಾಗಿದೆ. ಧಾರಾಕಾರ ಮಳೆಯಿಂದ ಈ ಭಾಗದ ಬಹುತೇಕ ಹಳ್ಳಕೊಳ್ಳಗಳು ತುಂಬಿವೆ. ಮದಿರೆ ಗ್ರಾಮದ ಬಳಿ ಹರಿಯುವ ಹಿರೇಹಳ್ಳ ತುಂಬಿ ಸೇತುವೆಯ ಮೇಲೆ ಹರಿದ ಪರಿಣಾಮ ಮದಿರೆ ಮತ್ತು ಕೋಳೂರು ನಡುವೆ ಸಂಚಾರಕ್ಕೆ ಅಡ್ಡಿಯಾಯಿತು. ಶಿವಮೊಗ್ಗ ನಗರ, ತೀರ್ಥಹಳ್ಳಿ, ಹೊಸನಗರ ಹಾಗೂ ಸಾಗರ, ಚಿತ್ರದುರ್ಗ ನಗರ, ಚಿಕ್ಕಜಾಜೂರು, ದಾವಣಗೆರೆ ಜಿಲ್ಲೆ ಹರಪನಹಳ್ಳಿ ಹಾಗೂ ಸುತ್ತಮುತ್ತ ಶುಕ್ರವಾರ ಉತ್ತಮ ಮಳೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.