ರಾಜ್ಯ
ಸಿಎಂ ಸಿದ್ದರಾಮಯ್ಯರಿಂದ ಅಧಿಕಾರ ದುರುಪಯೋಗ: ಪೊಲೀಸ್ ಮಹಾಸಂಘ ಆರೋಪ
ಅಧಿಕಾರ ದುರುಪಯೋಗ ಮಾಡಿಕೊಂಡು ತಮ್ಮಿಷ್ಟದವರಿಗೆ ಸಹಾಯ ಮಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯ ...
ಬೆಂಗಳೂರು: ಅಧಿಕಾರ ದುರುಪಯೋಗ ಮಾಡಿಕೊಂಡು ತಮ್ಮಿಷ್ಟದವರಿಗೆ ಸಹಾಯ ಮಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಕೈಗೆತ್ತಿಕೊಳ್ಳಲು ಅನುಮತಿ ನೀಡಬೇಕೆಂದು ಕೋರಿ ಪೊಲೀಸ್ ಅಧಿಕಾರಿ ಮಹಾಸಂಘ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.
ಹೊಸಕೋಟೆ ಶಾಸಕ ಎನ್.ನಾಗರಾಜ್ ಅವರನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರದೇಶ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಿಸಿರುವುದಕ್ಕೆ ಅವರ ವಿರುದ್ಧ ಕಾನೂನು ಕ್ರಮವಾಗಿ ವಿಚಾರಣೆ ಕೈಗೆತ್ತಿಕೊಳ್ಳಲು ಅನುಮತಿ ನೀಡಬೇಕೆಂದು ಮಹಾಸಂಘ ರಾಜ್ಯಪಾಲರನ್ನು ಪತ್ರದಲ್ಲಿ ಕೋರಿದ್ದಾರೆ.
ಅವರು ತಮ್ಮ ಪತ್ರದಲ್ಲಿ, ಮುಖ್ಯಮಂತ್ರಿಗಳು ತಾವು ಅಧಿಕಾರ ವಹಿಸಿಕೊಂಡ ಸಂದರ್ಭದಲ್ಲಿ ಮಾಡಿರುವ ಪ್ರತಿಜ್ಞೆಯನ್ನು ಮರೆತು ಮನಸೋ ಇಚ್ಛೆ ವರ್ತಿಸುತ್ತಿದ್ದು ಕಾನೂನನ್ನು ಉಲ್ಲಂಘಿಸುತ್ತಿದ್ದಾರೆ. ಇದಕ್ಕೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕಾಗಿದೆ. ಅಭ್ಯರ್ಥಿಗಳ ಹಿನ್ನೆಲೆ ತಿಳಿಯದೆ ಪಕ್ಷದಲ್ಲಿ ತಮಗೆ ಇಷ್ಟಬಂದವರಿಗೆ ವಿವಿಧ ನಿಗಮ ಮತ್ತು ಮಂಡಳಿಗಳ ಅಧ್ಯಕ್ಷ ಹುದ್ದೆಯನ್ನು ನೀಡುತ್ತಿದ್ದಾರೆ.ಇದು ಅವರಿಗೆ ಅಭ್ಯಾಸವಾಗಿ ಹೋಗಿದೆ ಎಂದು ಪತ್ರದಲ್ಲಿ ಆರೋಪಿಸಿದ್ದಾರೆ.
ಅಲ್ಲದೆ ಪತ್ರದಲ್ಲಿ ಅವರು, ನಿಗಮ, ಮಂಡಳಿಗಳ ಅಧ್ಯಕ್ಷ ಸ್ಥಾನಕ್ಕೆ ನೇಮಕವಾಗಲು ಏನೆಲ್ಲಾ ಅರ್ಹತೆ ಮತ್ತು ಮಾನದಂಡಗಳು ಬೇಕು ಎಂಬುದನ್ನು ಕೂಡ ಮಹಾಸಂಘ ವಿವರಿಸಿದ್ದಾರೆ.