ಚೆನ್ನೈ: ರಾಜ್ಯದ ಹಲವು ಭಾಗಗಳಲ್ಲಿ ಮತ್ತು ಕೇರಳದಲ್ಲಿ ಸತತ ಮಳೆಯಿಂದಾಗಿ ಕಬಿನಿ ಮತ್ತು ಕೃಷ್ಣರಾಜ ಸಾಗರ ಜಲಾಶಯಗಳಿಂದ ಮುಂದಿನ ಎರಡು ದಿನಗಳಲ್ಲಿ ಸುಮಾರು 1 ಲಕ್ಷ ಕ್ಯೂಸೆಕ್ಸ್ ನೀರು ಬಿಡುವ ಸಾಧ್ಯತೆಯಿದ್ದು ಕರ್ನಾಟಕ ಮತ್ತು ತಮಿಳುನಾಡು ಸರ್ಕಾರಕ್ಕೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಕೇಂದ್ರ ಜಲ ಆಯೋಗ ಎಚ್ಚರಿಕೆ ನೀಡಿದೆ.
ಕರ್ನಾಟಕ ಮತ್ತು ಕೇರಳಗಳಲ್ಲಿ ಭಾರೀ ಮಳೆಯಿಂದಾಗಿ ಕಬಿನಿ ಮತ್ತು ಕೆಆರ್ ಎಸ್ ಜಲಾಶಯಗಳಿಂದ ಹೆಚ್ಚುವರಿ ನೀರನ್ನು ಹೊರಬಿಡಲಾಗುತ್ತಿದೆ. ಎರಡೂ ಜಲಾಶಯಗಳಿಂದ ಒಟ್ಟಾಗಿ ಸುಮಾರು 1 ಲಕ್ಷಕ್ಕೂ ಅಧಿಕ ಕ್ಯೂಸೆಕ್ಸ್ ನೀರು ಹೊರಬರುವ ಸಾಧ್ಯತೆಯಿದೆ. ಹೀಗಾಗಿ ಮೆಟ್ಟೂರು ಜಲಾಶಯಕ್ಕೆ ಮುಂದಿನ ಎರಡು ದಿನಗಳಲ್ಲಿ ಭಾರೀ ನೀರು ಹರಿದುಬರಲಿದೆ. ಈ ಹಿನ್ನಲೆಯಲ್ಲಿ ತಗ್ಗು ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕೆಂದು ತಿಳಿಸಲಾಗಿದೆ ಎಂದು ಕೇಂದ್ರ ಜಲ ಆಯೋಗ ತನ್ನ ಸಲಹಾ ಎಚ್ಚರಿಕೆ ನೀಡಿದೆ.
ಕಂದಾಯ ಆಡಳಿತ, ವಿಪತ್ತು ನಿರ್ವಹಣೆ ಮತ್ತು ಉಪಶಮನ ಕೇಂದ್ರದ ಹಿರಿಯ ಅಧಿಕಾರಿ ಪ್ರತಿಕ್ರಿಯೆ ನೀಡಿ ಕೇಂದ್ರದಿಂದ ಮುನ್ನೆಚ್ಚರಿಕೆ ಬಂದಿದ್ದು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಕಾವೇರಿ ತೀರ ಪ್ರದೇಶದ ಜನರಿಗೆ ಎಚ್ಚರಿಕೆ ವಹಿಸುವಂತೆ ಹೇಳಲಾಗಿದೆ ಎಂದು ಹೇಳಿದ್ದಾರೆ.
ಕೇಂದ್ರ ಜಲ ಆಯೋಗ 6 ಜಿಲ್ಲೆಗಳಾದ ಕೃಷ್ಣಗಿರಿ, ಧರ್ಮಪುರಿ, ತಿರುಚಿ, ಸೇಲಂ, ಎರೊಡ್ ಮತ್ತು ತಂಜಾವೂರು ಜಿಲ್ಲೆಗಳಿಗೆ ಎಚ್ಚರಿಕೆ ನೀಡಿದರೂ ಸಹ ನಾವು ಕಾವೇರಿ ಜಲಾನಯನದ ಎಲ್ಲಾ ಜಿಲ್ಲೆಗಳಿಗೆ ಮುನ್ನೆಚ್ಚರಿಕೆ ಘೋಷಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Advertisement