ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಲಿರುವ ಸಿಎಂ ಕುಮಾರಸ್ವಾಮಿ; ನಾಳೆ ಭೇಟಿ

ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರು ಉತ್ತರ ಕರ್ನಾಟಕ ಭಾಗದ ಜನರಿಗೆ ಮಲತಾಯಿ ...
ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ
ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ

ವಿಜಯಪುರ: ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರು ಉತ್ತರ ಕರ್ನಾಟಕ ಭಾಗದ ಜನರಿಗೆ ಮಲತಾಯಿ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಉತ್ತರ ಕರ್ನಾಟಕ ಹೋರಾಟ ಸಮಿತಿ ಚಳವಳಿಗಾರರು ಆರೋಪಿಸಿದ್ದರು. ಮುಖ್ಯಮಂತ್ರಿ ಕುಮಾರಸ್ವಾಮಿ ಕೃಷ್ಣರಾಜ ಸಾಗರ ಜಲಾಶಯಕ್ಕೆ ಮಾತ್ರ ಬಾಗಿನ ಅರ್ಪಿಸಿದ್ದು ಉತ್ತರ ಕರ್ನಾಟಕ ಭಾಗದ ಜನರ ಕೆಂಗಣ್ಣಿಗೆ ಗುರಿಯಾಗಿತ್ತು.

ಇದೀಗ ಉತ್ತರ ಕರ್ನಾಟಕ ಭಾಗದ ಲಾಲ್ ಬಹದ್ದೂರು ಶಾಸ್ತ್ರಿ ಜಲಾಶಯ ಜುಲೈ 17ರಂದೇ ಭರ್ತಿಯಾಗಿತ್ತು. ಅಂದೇ ಜಲಾಶಯದ ಎಲ್ಲಾ ಕ್ರೆಸ್ಟ್ ಗೇಟ್ ಗಳನ್ನು ತೆರೆದು 1.45 ಲಕ್ಷ ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗಿತ್ತು. ಮರುದಿನ ನಾರಾಯಣಪುರ ಜಲಾಶಯ ಕೂಡ ಭರ್ತಿಯಾಗಿತ್ತು.

ಈ ತಿಂಗಳ ಆರಂಭದಲ್ಲಿ ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ರಾಜ್ಯ ಸ್ಥಾನಮಾನ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆದಿತ್ತು. ಮುಖ್ಯಮಂತ್ರಿ ಕುಮಾರಸ್ವಾಮಿಯವರು ಉತ್ತರ ಕರ್ನಾಟಕಕ್ಕೆ ಮಲತಾಯಿ ಧೋರಣೆ ತಳೆಯುತ್ತಾರೆ ಎಂಬುದು ಅವರ ಆರೋಪವಾಗಿದೆ. ಅವರು ದಕ್ಷಿಣ ಕರ್ನಾಟಕಕ್ಕೆ ಮಾತ್ರ ಸಿಎಂ ಆಗಿದ್ದು, ಅಖಂಡ ಕರ್ನಾಟಕಕ್ಕೆ ಮುಖ್ಯಮಂತ್ರಿ ಅಲ್ಲ ಎಂದು ಟೀಕಿಸಿದ್ದರು.

ಆಲಮಟ್ಟಿ ಜಲಾಶಯ ಭರ್ತಿಯಾದರೂ ಸಹ ಬಾಗಿನ ಅರ್ಪಿಸಿಲ್ಲ. ಮರುದಿನ ಕೆಆರ್ ಎಸ್ ಜಲಾಶಯಕ್ಕೆ ಹೋಗಿ ಜಲಾಶಯಕ್ಕೆ ಬಾಗಿನ ಅರ್ಪಿಸಿದರು. ನಮ್ಮಲ್ಲಿಗೆ ಬರಲು ಮುಖ್ಯಮಂತ್ರಿಯವರಿಗೆ ಆಗಲಿಲ್ಲ ಎಂದು ಆರೋಪಿಸಿದ್ದರು.

ಇದೀಗ ಉತ್ತರ ಕರ್ನಾಟಕಕ್ಕೆ ಭೇಟಿ ನೀಡುವುದಾಗಿ ಮುಖ್ಯಮಂತ್ರಿ ಕಚೇರಿಯ ಅಧಿಕೃತ ಪ್ರಕಟಣೆ ತಿಳಿಸಿದೆ. ನಾಳೆ ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ ಎಂದಿದ್ದಾರೆ.
ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿದ ರಾಜ್ಯ ರೈತರ ಒಕ್ಕೂಟದ ಕಾರ್ಯದರ್ಶಿ ಅರವಿಂದ ಕುಲಕರ್ಣಿ, ಕಾವೇರಿ ನದಿಗಿಂತಲೂ ಹೆಚ್ಚಾಗಿ ಕೃಷ್ಣಾ ನದಿ ರೈತರಿಗೆ ಹೆಚ್ಚು ಜೀವನಾಡಿಯಾಗಿದೆ. ಮುಖ್ಯಮಂತ್ರಿಗಳು ಈ ಜಲಾಶಯಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕಾಗಿದೆ. ಅವರ ನಡತೆಯನ್ನು ಬದಲಾಯಿಸದಿದ್ದರೆ ಮುಖ್ಯಮಂತ್ರಿಯವರಿಗೆ ತಕ್ಕ ಪಾಠ ಕಲಿಸುವುದಾಗಿ ಹೇಳಿದ್ದಾರೆ.

ಈ ಮಧ್ಯೆ, ಉತ್ತರ ಕರ್ನಾಟಕ ಹೋರಾಟ ಸಮಿತಿಯ ಸದಸ್ಯರು ಕುಮಾರಸ್ವಾಮಿಯವರನ್ನು ಕಪ್ಪು ಧ್ವಜ ಹಾರಿಸುವ ಮೂಲಕ ಸ್ವಾಗತಿಸಲು ನಿರ್ಧರಿಸಿದ್ದಾರೆ. ಅಲ್ಲದೆ ನಾಳೆ ಆಲಮಟ್ಟಿ ಜಲಾಶಯದ ಮುಂದೆ ಪ್ರತಿಭಟನೆ ನಡೆಸಲಿದ್ದಾರೆ. ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ರಾಜ್ಯದ ಬೇಡಿಕೆ ಇನ್ನೂ ಇದೆ ಎನ್ನುತ್ತಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com