ಬೆಂಗಳೂರು: ಏರೋ ಇಂಡಿಯಾ ವೈಮಾನಿಕ ಪ್ರದರ್ಶನವನ್ನು ಬೆಂಗಳೂರಿನಿಂದ ಸ್ಥಳಾಂತರಿಸಲಾಗುತ್ತದೆ ಎಂಬ ಉಹಾಪೋಹಗಳ ನಡುವೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಮುಂದಿನ ಆವೃತ್ತಿಯ ಏರ್ ಶೋ ನಡೆಸಲು ಅನುಮತಿ ನೀಡುವಂತೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಬಳಿ ಮನವಿ ಮಾಡಿಕೊಂಡಿದ್ದಾರೆ.
ಅಲಿಘರ್ ನಲ್ಲಿ ರಕ್ಷಣಾ ಕಾರಿಡಾರ್ ಉದ್ಘಾಟನೆ ನಂತರ ಮಾತನಾಡಿದ ಯೋಗಿ ಆದಿತ್ಯನಾಥ್, ಏರ್ ಶೋ ನಡೆಸಲು ನಡೆಸಲು ಅನುಮತಿ ನೀಡುವಂತೆ ರಕ್ಷಣಾ ಸಚಿವರ ಬಳಿ ಮನವಿ ಮಾಡಿಕೊಂಡಿದ್ದಾರೆ.
ಎಲ್ಲಾ ರೀತಿಯ ಸೌಕರ್ಯಗಳನ್ನು ಒದಗಿಸುತ್ತೇವೆ. ಸಿದ್ಧತೆ ಮಾಡಿಕೊಳ್ಳಲು ಶೀಘ್ರದಲ್ಲಿಯೇ ಅನುಮತಿ ನೀಡಬೇಕೆಂದು ಕೇಳಿಕೊಂಡಿದ್ದಾರೆ. ಆದರೆ. ಈ ಸಂಬಂಧ ನಿರ್ಮಲಾ ಸೀತಾರಾಮನ್ ಯಾವುದೇ ಘೋಷಣೆ ಮಾಡಿಲ್ಲ.
ಆದಾಗ್ಯೂ, ಎರಡು ವರ್ಷಕ್ಕೊಮ್ಮೆ ನಡೆಯುವ ವೈಮಾನಿಕ ಪ್ರದರ್ಶನವನ್ನು ಬೆಂಗಳೂರಿನಲ್ಲಿ ಮುಂದುವರೆಸುವ ವಿಶ್ವಾಸದಲ್ಲಿದೆ ಕರ್ನಾಟಕ. ಇತ್ತೀಚಿಗೆ ನಿರ್ಮಲಾ ಸೀತಾರಾಮನ್ ಬೆಂಗಳೂರು ಭೇಟಿ ಸಂದರ್ಭದಲ್ಲಿ , ರಾಜ್ಯದಿಂದ ಏರ್ ಶೋ ಸ್ಥಳಾಂತರಿಸುವ ಪ್ರಸ್ತಾವ ಇಲ್ಲ ಎಂದು ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿಗೆ ಹೇಳಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳಿಂದ ತಿಳಿದುಬಂದಿದೆ.
ಈ ಮಧ್ಯೆ ಏರ್ ಶೋ ಸ್ಥಳಾಂತರ ಬಗ್ಗೆ ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹಾಗೂ ಕಂದಾಯ ಸಚಿವ ಆರ್ ವಿ ದೇಶಪಾಂಡೆ, ಬೆಂಗಳೂರಿನಿಂದ ಸ್ಥಳಾಂತರಿಸುವುದು ದುರದೃಷ್ಟಕರ ಸಂಗತಿ. ಎನ್ ಡಿಎ ಸರ್ಕಾರದ ಅವಧಿಯಲ್ಲಿ ಪ್ರಮುಖ ರಕ್ಷಣಾ ಯೋಜನೆಗಳನ್ನು ಕಳೆದುಕೊಳ್ಳುವಂತಾಗಿದೆ ಎಂದು ಪರಮೇಶ್ವರ್ ಹೇಳಿದ್ದಾರೆ. ಈ ವಿಷಯದಲ್ಲಿ ರಕ್ಷಣಾ ಸಚಿವರು ತಮ್ಮ ನಿಲುವು ಸ್ಪಷ್ಪಪಡಿಸುವಂತೆ ಅವರು ಆಗ್ರಹಿಸಿದ್ದಾರೆ.
Advertisement