ಬೆಂಗಳೂರು: ಸಿದ್ದಗಂಗಾ ಮಠದ ಸ್ವಾಮೀಜಿ ಶತಾಯುಷಿ, ನಡೆದಾಡುವ ದೇವರು ಡಾ.ಶಿವಕುಮಾರ ಸ್ವಾಮೀಜಿ (111) ಅನಾರೋಗ್ಯದಿಂದಾಗಿ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಶಿವಕುಮಾರ ಸ್ವಾಮೀಜಿಯವರು ಜ್ವರ, ರಕ್ತದಲ್ಲಿನ ಸೋಂಕು, ಪಿತ್ತನಾಳದ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ.
ಪ್ರಸ್ತುತ ಶ್ರೀಗಳ ಆರೋಗ್ಯ ಸ್ಥಿರವಾಗಿದ್ದು, ಶೀಘ್ರದಲ್ಲಿಯೇ ಆಸ್ಪತ್ರೆಯಿಂದ ಮಠಕ್ಕೆ ಕಳುಹಿಸಲಾಗುತ್ತದೆ ಎಂದು ವೈದ್ಯರು ಹೇಳಿದ್ದಾರೆ.
ಶ್ರೀಗಳಿಗೆ ಕಳೆದೆರಡು ದಿನಗಳಿಂದ ಅಲ್ಪ ಪ್ರಮಾಣದ ಚಳಿ ಹಾಗೂ ಜ್ವರ ಸಮಸ್ಯೆಯಿತ್ತು. ಹೀಗಾಗಿ ಬಿಜಿಎಸ್ ಆಸ್ಪತ್ರೆ ವೈದ್ಯರು ಸ್ವಾಮೀಜಿಯವರ ಸಿದ್ದಗಂಗಾ ಮಠಕ್ಕೆ ತೆರಳಿ ಚಿಕಿತ್ಸೆ ನೀಡಿದ್ದರು. ಜೊತೆಗೆ ಅಗತ್ಯ ಪರೀಕ್ಷೆಗಳನ್ನೂ ನಡೆಸಿದ್ದರು. ಆದರೂ ಜ್ವರ ನಿಯಂತ್ರಣಕ್ಕೆ ಬಾರದ ಹಿನ್ನಲೆಯಲ್ಲಿ ಶನಿವಾರ ಮಧ್ಯಾಹ್ನ ಬೆಂಗಳೂರಿಗೆ ಕರೆತರಲಾಗಿದೆ. ಸಂಜೆ 4 ಗಂಟೆ ಸುಮಾರಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.