ಜೈಲಿನಲ್ಲಿ ಶಶಿಕಲಾಗೆ ವಿಶೇಷ ಸೌಲಭ್ಯ ವಿಚಾರ: ಇಬ್ಬರು ಜೈಲು ಅಧಿಕಾರಿಗಳ ವಿರುದ್ಧ ಎಸಿಬಿ ತನಿಖೆಗೆ ಆದೇಶ
ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಎಐಎಡಿಎಂಕೆ ನಾಯಕಿ ವಿ. ಕೆ. ಶಶಿಕಲಾಗೆ ವಿಶೇಷ ಸೌಲಭ್ಯಗಳನ್ನು ಕಲ್ಪಿಸಿದ ವಿಚಾರವಾಗಿ ಇಬ್ಬರು ಹಿರಿಯ ಜೈಲು ಅಧಿಕಾರಿಗಳ ವಿರುದ್ಧ ಭ್ರಷ್ಠಾಚಾರ ನಿಗ್ರಹ ದಳ.....
ಸೆಂಟ್ರಲ್ ಜೈಲಿನಲ್ಲಿ ಎಐಎಡಿಎಂಕೆ ನಾಯಕಿ ವಿ. ಕೆ. ಶಶಿಕಾಲಾ (ಸಂಗ್ರಹ ಚಿತ್ರ)
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಎಐಎಡಿಎಂಕೆ ನಾಯಕಿ ವಿ. ಕೆ. ಶಶಿಕಲಾಗೆ ವಿಶೇಷ ಸೌಲಭ್ಯಗಳನ್ನು ಕಲ್ಪಿಸಿದ ವಿಚಾರವಾಗಿ ಇಬ್ಬರು ಹಿರಿಯ ಜೈಲು ಅಧಿಕಾರಿಗಳ ವಿರುದ್ಧ ಭ್ರಷ್ಠಾಚಾರ ನಿಗ್ರಹ ದಳ (ಎಸಿಬಿ) ತನಿಖೆಗೆ ಸರ್ಕಾರ ಆದೇಶಿಸಿದೆ ಎಂದು ಪೋಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಶಿಕಲಾಗೆ ವಿಶೇಷ ಸವಲತ್ತು ನೀಡಿದ ಸಂಬಂಧ ಹಿರಿಯ ಜೈಲು ಅಧಿಕಾರಿಗಳ ವಿರುದ್ಧ ಎಸಿಬಿ ತನಿಖೆ ನಡೆಸಬೇಕೆಂದು ಸರ್ಕಾರ ಆದೇಶ ಹೊರಡಿಸಿದೆ ಎಂದು ಐಜಿಪಿ(ಹೋಮ್ ಗಾರ್ಡ್ಸ್) ಡಿ.ರೂಪ ಪಿಟಿಐಗೆ ತಿಳಿಸಿದ್ದಾರೆ.
ಕಳೆದ ಜುಲೈನಲ್ಲಿ ಅಂದು ಜೈಲು ಡಿಐಜಿ ಆಗಿದ್ದ ರೂಪಾ ಅವರು ಪರಪ್ಪನ ಅಗ್ರಹಾರದಲ್ಲಿ ನಡೆದಿದ್ದ ಹಗರಣವನ್ನು ಬಯಲಿಗೆಳೆದಿದ್ದರು. ಶಶಿಕಲಾ ಅವರಿಗೆ ವಿಶೇಷ ಸವಲತ್ತು ಕಲ್ಪಿಸಲಿಕ್ಕಾಗಿ 2 ಕೋಟಿ ರೂ. ಲಂಚ ಪಡೆಯಲಾಗಿದೆ ಎಂದು ಅವರು ಆರೋಪಿಸಿದ್ದರು.
ಮೂರು ತಿಂಗಳಿನಲ್ಲಿ ವರದಿ ಸಲ್ಲಿಸುವಂತೆ ಎಸಿಬಿಗೆ ಸೂಚಿಸಲಾಗಿತ್ತು ಎಂದು ರೂಪಾ ಹೇಳಿದ್ದಾರೆ. ಪರಪ್ಪನ ಅಗ್ರಹಾರ ಲಂಚ ಪ್ರಕರಣ ಸಂಬಂಧ ಜೈಲು ಅಧಿಕಾರಿಗಳ ಬಣ್ಣ ಬಯಲು ಮಾಡಿದ್ದ ರೂಪಾ ಅವರನ್ನು ಜೈಲಿನ ಡಿಐಜಿ ಹುದ್ದೆಯಿಂದ ವರ್ಗಾವಣೆ ಮಾಡಲಾಗಿತ್ತು.
ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಆಪ್ತ ಸಹಾಯಕಿಯಾಗಿದ್ದ ಶಶಿಕಾಲಾ ಅಕ್ರಮ ಆಸ್ತಿ ಪ್ರಕರಣ ಸಂಬಂಧ ಬೆಂಗಳೂರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ.