ಮಂಗಳೂರು: ಬಜರಂಗದಳದ ಕಾರ್ಯಕರ್ತ ದೀಪಕ್ ರಾವ್ ಹತ್ಯೆಗೆ ಪ್ರತೀಕಾರವಾಗಿ ಕೊಟ್ಟಾರ ಚೌಕಿಯಲ್ಲಿ ಬಶೀರ್ ಎಂಬುವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಟಿಆರ್ ಸುರೇಶ್ ತಿಳಿಸಿದ್ದಾರೆ.
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಗರ ಪೊಲೀಸ್ ಆಯುಕ್ತರು, ಪ್ರಕರಣ ಸಂಬಂಧ ಶ್ರೀಜಿತ್ ಪಿಕೆ, ಕಿಷನ್ ಪೂಜಾರಿ, ಧನುಶ್ ಪೂಜಾರಿ ಹಾಗೂ ಸಂದೇಶ್ ಕೋಟ್ಯಾನ್ ಎಂಬುವರನ್ನು ಬಂಧಿಸಲಾಗಿದ್ದು ಆರೋಪಿಗಳು ಕೇರಳ ಹಾಗೂ ಮಂಗಳೂರಿನ ಅಡ್ಯಾರ್ ನಿವಾಸಿಗಳು ಎಂದು ತಿಳಿಸಿದ್ದಾರೆ.
ಆರೋಪಿ ಧನುಷ್ ಮನೆಯಲ್ಲಿದ್ದ ಆಯುಧಗಳನ್ನು ತೆಗೆದುಕೊಂಡು ಯಾರನ್ನಾದರೂ ಹತ್ಯೆ ಮಾಡಬೇಕೆಂದು ಸುರತ್ಕಲ್ ಕಡೆ ಹೊರಟಿದ್ದರು. ಈ ಸಂದರ್ಭದಲ್ಲಿ ಕೊಟ್ಟಾರ ಚೌಕಿಯಲ್ಲಿ ಸಿಕ್ಕ ಬಶೀರ್ ಮೇಲೆ ಹಲ್ಲೆ ನಡೆಸಿರುವುದಾಗಿ ಆರೋಪಿಗಳು ಒಪ್ಪಿಕೊಂಡಿರುವುದಾಗಿ ಟಿಆರ್ ಸುರೇಶ್ ತಿಳಿಸಿದ್ದಾರೆ.
ಇನ್ನು ಗಂಭೀರವಾಗಿ ಗಾಯಗೊಂಡಿರುವ ಬಷೀರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅವರ ಆರೋಗ್ಯ ಸುಧಾರಿಸಿದೆ ಎಂದು ಹೇಳಿದರು.