ಅನಧಿಕೃತ ಕಟ್ಟಡ ನಿರ್ಮಾಣ: ಬಿಬಿಎಂಪಿಗೆ ಹೈಕೋರ್ಟ್ ತರಾಟೆ

ನಗರದಲ್ಲಿ ಕಾನೂನು ಇದೆಯೇ ಅಥವಾ ಜಂಗಲ್ ಲಾ ಇದೆಯೇ? ಇಂತಹ ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ಬೆಂಗಳೂರು: ನಗರದಲ್ಲಿ ಕಾನೂನು ಇದೆಯೇ ಅಥವಾ ಜಂಗಲ್ ಲಾ ಇದೆಯೇ? ಇಂತಹ ಪ್ರಶ್ನೆಯನ್ನು ಕೇಳಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ಕರ್ನಾಟಕ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿತು. 
ಬೆಂಗಳೂರು ದಕ್ಷಿಣ ತಾಲ್ಲೂಕಿನ ಬೇಗೂರು ಹೋಬಳಿಯ ಯಲೇನಹಳ್ಳಿಯಲ್ಲಿ ಅಕ್ರಮವಾಗಿ ರಾಜಕಾಲುವೆ ನಿರ್ಮಿಸಲು ಬಿಟ್ಟಿದ್ದಕ್ಕೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಹೈಕೋರ್ಟ್ ನಿನ್ನೆ ಹೀಗೆ ಪ್ರಶ್ನಿಸಿತು.
ತಾತ್ಕಾಲಿಕ ಮುಖ್ಯ ನ್ಯಾಯಮೂರ್ತಿ ಹೆಚ್.ಜಿ.ರಮೇಶ್ ಮತ್ತು ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ಪೀಠ, ವಕೀಲ ಹಾಗೂ ಅರ್ಜಿದಾರ ಜೆ.ಸುನಿಲ್ ಕುಮಾರ್ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿತು. ಯಾವುದೇ ಅನುಮೋದಿತ ಯೋಜನೆಗಳಿಲ್ಲದೆ ಅಕ್ರಮ ಕಟ್ಟಡ ನಿರ್ಮಾಣವನ್ನು ತಡೆಯಲು ಬಿಬಿಎಂಪಿ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂಬ ಕುರಿತು ಹೈಕೋರ್ಟ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿತು.
ಬಿಬಿಎಂಪಿ ಇದುವರೆಗೆ ಯಾವುದೇ ಕ್ರಮ ಕೈಗೊಳ್ಳದಿರುವುದನ್ನು ಗಂಭೀರವಾಗಿ ತೆಗೆದುಕೊಂಡಿರುವ ನ್ಯಾಯಾಲಯ ಅಕ್ರಮ ಕಟ್ಟಡಗಳ ನಿರ್ಮಾಣಕ್ಕೆ ಅವಕಾಶ ನೀಡುವುದು ಗಂಭೀರ ಮತ್ತು ಸಾರ್ವಜನಿಕರಿಗೆ ತೊಂದರೆ ನೀಡುವ ವಿಚಾರವಾಗಿದೆ. ಇಲ್ಲಿ ಆಡಳಿತ ಯಂತ್ರ ಸಂಪೂರ್ಣವಾಗಿ ವಿಫಲವಾಗಿರುವುದನ್ನು ಎತ್ತಿ ತೋರಿಸುತ್ತದೆ. ಇಲ್ಲಿ ಅಧಿಕಾರಿಗಳ ಪಾತ್ರವಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಇಲ್ಲದಿದ್ದರೆ ಅಕ್ರಮ ಕಟ್ಟಡ ನಿರ್ಮಾಣವನ್ನು ತಡೆಯಬಹುದಾಗಿತ್ತು ಎಂದು ನ್ಯಾಯಾಧೀಶರು ಹೇಳಿದರು.
ಅರ್ಜಿದಾರರ ಪರ ವಕೀಲ ಕೆ.ಅರ್ಜುನ್ ವರ್ಮ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ ಡಿ.ರಾಮಚಂದ್ರ ಎನ್ನುವ ವ್ಯಕ್ತಿ 4 ಮಹಡಿ ಕಟ್ಟಡವನ್ನು ರಾಜಕಾಲುವೆ ಒತ್ತುವರಿ ಮಾಡಿ ನಿರ್ಮಿಸುತ್ತಿದ್ದಾರೆ. ಇದರಿಂದ ಚರಂಡಿನೀರು ಸರಾಗವಾಗಿ ಹರಿದುಹೋಗಲು ತಡೆಯಾಗುತ್ತಿದೆ. ಇದರಿಂದ ಅಕ್ಕಪಕ್ಕದ ಕಟ್ಟಡಗಳು ಯಾವುದೇ ಕ್ಷಣದಲ್ಲಿಯೂ ಮುರಿದು ಬೀಳುವ ಸಾಧ್ಯತೆಯಿದೆ ಎಂದು ವಿವರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com