ಕಾರ್ಯಕ್ರಮದಲ್ಲಿ ಮಾತನಾಡಿರುವ ಕುಮಾರಸ್ವಾಮಿಯವರು, ಸಣ್ಣ ಕೈಗಾರಿಕೆ ಉದ್ಯಮಿಗಳು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ಕಸ, ಸಂಚಾರದ ಸಮಸ್ಯೆ ಹೆಚ್ಚಾಗಿದೆ. ಅಲ್ಲದೆ, ಜನರ ಸಮಸ್ಯೆಗಳನ್ನು ಸಹ ಆಲಿಸಿದ್ದೇನೆ. ವಿದೇಶಗಳಿಗೆ ಭೇಟಿ ಕೊಟ್ಟು ಅಲ್ಲಿನ ತಂತ್ರಜ್ಞಾನಗಳ ಕುರಿತು ಮಾಹಿತಿ ಪಡೆಯಲಾಗಿದ್ದು, ಅವುಗಳನ್ನು ಅನುಷ್ಠಾನಗೊಳಿಸಲಾಗುವುದು. ರೈತರ ಅಭಿವೃದ್ಧಿಗಾಗಿ ಕೃಷಿಯನ್ನು ಒಂದು ಉದ್ಯಮವನ್ನಾಗಿ ಮಾಡಲು ಹಲವು ಯೋಜನೆಗಳನ್ನು ರೂಪಿಸಲಾಗಿದೆ. ಬೆಳ್ಳಂದೂರು ಕೆರೆಗೆ ಬೆಂಕಿ ಬಿದ್ದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಅಧಿಕಾರಕ್ಕೆ ಬಂದ ಒಂದೇ ತಿಂಗಳಲ್ಲಿ ಬೆಳ್ಳಂದೂರು ಕೆರೆ ಸೇರಿದಂತೆ ಎಲ್ಲಾ ಕೆರೆಗಳನ್ನು ಶುದ್ಧೀಕರಣ ಮಾಡಲಾಗುವುದು ಹಾಗೂ ಒಂದು ವರ್ಷದಲ್ಲಿ ಕೆರೆಗಳ ಅಭಿವೃದ್ಧಿ ಮಾಡಲಾಗುವುದು ಎಂದು ಹೇಳಿದರು.