ಬೆಂಗಳೂರು: ವೈಯಾಲಿಕಾವಲ ಪೊಲೀಸರು ನಿನ್ನೆ ಆತ್ಮಹತ್ಯೆಗೆ ಶರಣಾದ ಪೌರ ಕಾರ್ಮಿಕ ಎಸ್ ಸುಬ್ರಮಣಿ ಪ್ರಕರಣದ ತನಿಖೆ ಆರಂಭಿಸಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಠಾಣೆಗೆ ಬಂದು ಹೇಳಿಕೆ ನೀಡುವಂತೆ ಇಬ್ಬರು ಬಿಬಿಎಂಪಿ ಅಧಿಕಾರಿಗಳಿಗೆ ಬುಧವಾರ ನೋಟಿಸ್ ನೀಡಿದ್ದಾರೆ.
ಇದೇ ವೇಳೆ ಸುಬ್ರಮಣಿ ಅವರು ಕೆಪಿಸಿಸಿ ಅಧ್ಯಕ್ಷರಿಗೆ ಬರೆದಿರುವ ಪತ್ರವನ್ನು ಸುಯಿಸೈಡ್ ನೋಟ್ ಎಂದು ಪರಿಗಣಿಸುವುದಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ವೈಯಾಲಿಕಾವಲ ಪೊಲೀಸರು ಈಗಾಗಲೇ ಸುಬ್ರಮಣಿ ಪತ್ನಿ ಕವಿತಾ ಅವರ ಹೇಳಿಕೆಯನ್ನು ದಾಖಲಿಸಿಕೊಂಡಿದ್ದು, ತನ್ನ ಪತಿ ಸಾವಿಗೆ ಬಿಬಿಎಂಪಿ ಅಧಿಕಾರಿಗಳೇ ಹೊಣೆ ಎಂದು ಆರೋಪಿಸಿದ್ದಾರೆ.
ಇದೊಂದು ಆತ್ಮಹತ್ಯೆ ಪ್ರಕರಣ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದ್ದು, ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ ಮತ್ತು ಅವರು ಯಾವುದೇ ನಿರ್ಧಿಷ್ಟ ವ್ಯಕ್ತಿಯ ವಿರುದ್ಧ ಆರೋಪ ಮಾಡಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ತನಿಖೆಯ ಭಾಗವಾಗಿ ಬಿಬಿಎಂಪಿಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ರಾಜೀವ್ ಮತ್ತು ಕಿರಿಯ ಆರೋಗ್ಯ ಅಧಿಕಾರಿ ಉಮಾಶಂಕರ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿರುವುದಾಗಿ ಅವರು ಹೇಳಿದ್ದಾರೆ.
ಕಳೆದ ಏಳು ತಿಂಗಳಿಂದ ವೇತನ ಸಿಗದ ಹಿನ್ನೆಲೆಯಲ್ಲಿ ನೊಂದ ಸುಬ್ರಮಣಿ(40) ಅವರು ನಿನ್ನೆ ಆತ್ಮಹತ್ಯೆಗೆ ಶರಣಾಗಿದ್ದರು.