ಭಾರೀ ಮಳೆ, ಹೆಚ್ಚು ಸಾವು : ಕಳೆದ ನಾಲ್ಕು ತಿಂಗಳ ಅವಧಿಯಲ್ಲಿ ಮಳೆಗೆ 138 ಬಲಿ

ಈ ಬಾರಿ ರಾಜ್ಯದೆಲ್ಲೆಡೆ ಉತ್ತಮ ಮಳೆಯಾಗುತ್ತಿದ್ದು, ಮಳೆ ಸಂಬಂಧಿತ ಅನಾಹುತಗಳಲ್ಲಿ ಸಿಲುಕಿ ಮೃತಪಡುತ್ತಿರುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಕಳೆದ ನಾಲ್ಕು ತಿಂಗಳ ಅವಧಿಯಲ್ಲಿ ಮಳೆಯಿಂದಾಗಿ ಸುಮಾರು 138 ಜನರು ಸಾವನ್ನಪ್ಪಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಈ ಬಾರಿ  ರಾಜ್ಯದೆಲ್ಲೆಡೆ ಉತ್ತಮ ಮಳೆಯಾಗುತ್ತಿದ್ದು, ಮಳೆ ಸಂಬಂಧಿತ ಅನಾಹುತಗಳಲ್ಲಿ ಸಿಲುಕಿ ಮೃತಪಡುತ್ತಿರುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಕಳೆದ ನಾಲ್ಕು ತಿಂಗಳ ಅವಧಿಯಲ್ಲಿ  ಮಳೆಯಿಂದಾಗಿ ಸುಮಾರು  138 ಜನರು ಸಾವನ್ನಪ್ಪಿದ್ದಾರೆ.

ದಿ ನ್ಯೂ ಇಂಡಿಯನ್  ಎಕ್ಸ್ ಪ್ರೆಸ್ ಗೆ ದೊರೆತಿರುವ ಮಾಹಿತಿ ಪ್ರಕಾರ ಮಾರ್ಚ್ 2018 ರಿಂದ ಜುಲೈ 10 ರವರೆಗೂ ಮಳೆ ಸಂಬಂಧಿತ ಅನಾಹುತಗಳಲ್ಲಿ ಸುಮಾರು 138 ಮಂದಿ ಸಾವನ್ನಪ್ಪಿದ್ದಾರೆ. ಈ ಪೈಕಿ 103 ಸಿಡಿಲಿಗೆ ಸಿಲುಕಿ ಸತ್ತಿದ್ದರೆ, 12 ಮಂದಿ ನೀರಿನಲ್ಲಿ ಮುಳುಗಿ ಹೋಗಿದ್ದಾರೆ, ಮನೆ ಧ್ವಂಸಗೊಂಡು ಏಳು ಮಂದಿ ಸಾವನ್ನಪ್ಪಿದ್ದಾರೆ.  ಮರ ಬಿದ್ದು 8 ಮಂದಿ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.

ಕಳೆದ ವರ್ಷದ  12 ತಿಂಗಳ ಅವಧಿಯಲ್ಲಿ  ಮಳೆ ಸಂಬಂಧಿತ ಘಟನೆಗಳಲ್ಲಿ  160 ಮಂದಿ ಸಾವನ್ನಪ್ಪಿದ್ದರು.  ಈ ಬಾರಿ  ರಾಜ್ಯದಲ್ಲಿ 526 ಮಿಲಿ ಮೀಟರ್ ಮಳೆಯಾಗಿದ್ದು, ಶೇಕಡ 24ರಷ್ಟು ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿದೆ. ಮುಂಗಾರು ಇನ್ನೂ 50 ದಿನಗಳವರೆಗೂ ಮುಂದುವರೆಯಲಿದ್ದು,  ಇನ್ನಷ್ಟು ಪ್ರಮಾಣದ ಹಾನಿಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಹಿರಿಯ  ಅಧಿಕಾರಿಗಳು ತಿಳಿಸಿದ್ದಾರೆ.

ಬೆಳಗಾವಿ, ವಿಜಯಪುರ, ಬಾಗಲಕೋಟೆ, ಮೈಸೂರು, ಕೊಡಗು, ಮಂಡ್ಯ, ಹಾಸನ, ರಾಮನಗರ ಜಿಲ್ಲೆಯ ನದಿಗಳ ನೀರಿನ ಮಟ್ಟದಲ್ಲಿ ಹೆಚ್ಚಳವಾಗಿದ್ದು,  ಪ್ರವಾಹ ಪೀಡಿತ ಗ್ರಾಮಗಳ ಜನರಿಗೆ ಮುನ್ನೆಚ್ಚರಿಕೆ ನೀಡುವಂತೆ  ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕೆಎಸ್ ಎನ್ ಡಿಎಂ ಸಿ ನಿರ್ದೇಶಕ ಶ್ರೀನಿವಾಸ ರೆಡ್ಡಿ ಹೇಳಿದ್ದಾರೆ.

 ಮಲೆನಾಡು, ಕರಾವಳಿ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಅಗತ್ಯ ಕ್ರಮ ಕೈಗೊಳ್ಳುವಂತೆ ವಿಪತ್ತು ನಿರ್ವಹಣಾ ವಿಭಾಗದ ಪ್ರಧಾನ ಕಾರ್ಯದರ್ಶಿ ಗಂಗರಾಮ್  ಬಡೇರಿಯಾ ನಿರ್ದೇಶನ ನೀಡಿದ್ದಾರೆ.

ರಾಜ್ಯದಲ್ಲಿನ ನದಿಗಳ ನೀರಿನ ಪ್ರಮಾಣದಲ್ಲಿ ಹೆಚ್ಚಳ ಕುರಿತಂತೆ ನಿಗಾ ಇರಿಸುವಂತೆ  ಕೇಂದ್ರೀಯ ಜಲ ಆಯೋಗ  ಸಲಹೆ ನೀಡಿದೆ.  ಪಶ್ಚಿಮ ಘಟ್ಟ ಪ್ರದೇಶದಲ್ಲಿನ ಭಾರೀ ಮಳೆಯಿಂದಾಗಿ  ಕಾವೇರಿ ಜಲಾನಯನ ಪ್ರದೇಶದ ವ್ಯಾಪ್ತಿಯಲ್ಲಿನ ಜಲಾಶಯಗಳ ನೀರಿನ ಮಟ್ಟದಲ್ಲಿ ಹೆಚ್ಚಳವಾಗಿದೆ.

ಹಾರಂಗಿ, ಕಬಿನಿ ಜಲಾಶಯಗಳು ಭರ್ತಿಯಾಗಿದ್ದು, ಹೇಮಾವತಿ , ಕೆಆರ್ ಎಸ್ ಜಲಾಶಯಗಳಿಗೆ ಹರಿದುಬರುತ್ತಿರುವ ನೀರಿನ ಪ್ರಮಾಣದಲ್ಲಿ ಹೆಚ್ಚಳವಾಗಿದೆ.  ಕೃಷ್ಣಾ, ಭೀಮಾ, ತುಂಗಾಭದ್ರಾ ನದಿಗಳಿಗೆ ಕಳೆದ ಮೂರು ದಿನಗಳಿಂದಲೂ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದುಬರುತ್ತಿದೆ. ಆಲಮಟ್ಟಿ ಜಲಾಶಯದಲ್ಲಿನ ನೀರಿನ ಪ್ರಮಾಣದಲ್ಲಿಯೂ ಹೆಚ್ಚಳವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com